ರಿಪ್ಪನ್ ಪೇಟೆ: ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ.
ಸುತ್ತ ಮುತ್ತ ನೂರಾರು ಹಳ್ಳಿಗಳ ಕೇಂದ್ರಬಿಂದುವಾಗಿರುವ ರಿಪ್ಪನ್ ಪೇಟೆ ಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದ್ದು,ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರತಿ ದಿನ ಸುತ್ತಮುತ್ತಲಿನ ಹಳ್ಳಿಗಳಿಂದ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ಸಾವಿರಾರು ಜನ ಆಗಮಿಸುತ್ತಿದ್ದು ಎಲ್ಲರು ಈ ಸಾರ್ವಜನಿಕ ಶೌಚಾಲಯಕ್ಕೆ ಅವಲಂಬಿತರಾಗಿದ್ದಾರೆ.ಶೌಚಾಲಯ ನಿರ್ವಹಣೆಗೆ ಜನ ಇದ್ದರೂ ಅವರು ಕೇವಲ ಹಣ ವಸೂಲಿಗೆ ಮಾತ್ರ ಮೀಸಲಾಗಿದ್ದಾರೆಯೇ ಹೊರತು ಶೌಚಾಲಯದ ಸ್ವಚ್ಚತೆಯ ಬಗ್ಗೆ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ.
ಶೌಚಾಲಯದ ಎದುರುಗಡೆ ಇರುವ ಅನಧಿಕೃತ ಮಳಿಗೆಯಿಂದ ಮಹಿಳೆಯರು ಮತ್ತು ಗರ್ಭಿಣಿಯರಿಗೆ ಶೌಚಾಲಯ ಬಳಸಲು ಕಿರಿಕಿರಿಯಾಗುತ್ತಿದೆ.ಸ್ಥಳಿಯಾಡಳಿತ ಈ ಅನಧಿಕೃತ ಮಳಿಗೆಯವರಿಗೆ ಪರ್ಯಾಯ ಸ್ಥಳ ಗುರುತಿಸಿ ಅಲ್ಲಿಂದ ತೆರವುಗೊಳಿಸಬೇಕಿದೆ.
ಒಟ್ಟಾರೆಯಾಗಿ ಇಲ್ಲಿನ ಸಾರ್ವಜನಿಕ ಶೌಚಾಲಯ ಬಳಕೆಗೆ ಯೋಗ್ಯವಾಗಿಲ್ಲ.ರಿಪ್ಪನ್ ಪೇಟೆಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸ್ಥಳೀಯಾಡಳಿತದ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕಾಗಿದೆ.
ವರದಿ: ರಾಮನಾಥ್ ರಿಪ್ಪನ್ ಪೇಟೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್