ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ.
ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ ಇಲಾಖೆಯವರು ಮರವನ್ನು ತೆರವು ಮಾಡುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಇನ್ನು ಕಳೆದ ಮೂರ್ನಾಲ್ಕು ದಿನದಿಂದ ನಿರಂತ ಮಳೆಯಾಗುತ್ತಿದೆ. ಮರ ಬುಡಮೇಲಾಗಲು ಇದುವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.