ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಜ.19ರಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗ ಜಿಲ್ಲೆಯವರು ಕೆಪಿಸಿಸಿ ಕಚೇರಿ ಬಳಿ ಹಾಜರಿರುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ಬಹಿರಂಗ ಸಭೆ ನಡೆಯುವ ಸ್ಥಳದವರೆಗೆ ನಡೆಯುವ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇವೆ ಎಂದರು.
ಮೇಕೆದಾಟು ಯೋಜನೆಗೆ ಮೊದಲ ಬಾರಿಗೆ ಆಡಳಿತಾತ್ಮಕ ಮಂಜೂರಾತಿ ಕೊಟ್ಟಿದ್ದೇ ಅಂದಿನ ಕಾಂಗ್ರೆಸ್ ಸರ್ಕಾರ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದೆ. ಈ ಯೋಜನೆ ಜಾರಿಯಾದರೆ ಬೆಂಗಳೂರು ಸೇರಿದಂತೆ ಸುತ್ತಮುತ್ತಲ 10 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಅನುಕೂಲವಾಗಲಿದೆ. ಸದರಿ ಯೋಜನೆಯಿಂದ 67.15 ಟಿಎಂಸಿ ನೀರು ಸಂಗ್ರಹಿಸಬಹುದಾಗಿದೆ ಹಾಗೂ 400 ಮೇಗವಾಟ್ ವಿದ್ಯುತ್ ಉತ್ಪಾದಿಸಬಹುದಾಗಿದೆ. ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸಬಹುದಾಗಿದೆ. ಮುಂದಿನ 50 ವರ್ಷದವರೆಗೆ ಈ 10 ಜಿಲ್ಲೆಗಳಿಗೆ ಕುಡಿಯವ ನೀರಿನ ಸಮಸ್ಯೆ ಇರುವುದಿಲ್ಲ ಎಂದರು.ಈ ಯೋಜನೆ ಜಾರಿ ವಿಳಂಬವಾಗುತ್ತಿರುವ ಬಗ್ಗೆ ಬಿಜೆಪಿ ಸುಳ್ಳು ಹೇಳುತ್ತಿದೆ. ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ಸಹ ಈ ಯೋಜನೆ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ರೇಖಾ ರಂಗನಾಥ್, ಮೆಹಖ್ ಷರೀಫ್, ಮುಖಂಡರಾದ ಎಲ್.ರಾಮೇಗೌಡ, ವೈ.ಹೆಚ್.ನಾಗರಾಜ್, ಸಿ.ಎಸ್.ಚಂದ್ರಭೂಪಾಲ್, ಶಿವಲಿಂಗ ಮೂರ್ತಿ, ಚಂದ್ರಶೇಖರ್, ಎ.ಬಿ. ಮಾರ್ಟಿಸ್, ಸೌಗಂಧಿಕಾ ಇದ್ದರು.