Breaking
14 Jan 2026, Wed

ಸಹಜ ಸ್ಥಿತಿಯತ್ತ ಶಿವಮೊಗ್ಗ : 7 ಡ್ರೋಣ್ ಕ್ಯಾಮೆರಾ ಬಳಕೆ,ಬಿಗಿ ಪೊಲೀಸ್ ಭದ್ರತೆ :

ಕಳೆದ ನಾಲ್ಕು ದಿನಗಳಿಂದ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಶಾಂತವಾಗಿದ್ದು, ನಿಧಾನವಾಗಿ ಸಹಜಸ್ಥಿತಿಯತ್ತ ಮರಳುತ್ತಿದೆ.ಯುವಕ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಕಳೆದ ನಾಲ್ಕು
ದಿನಗಳಿಂದಲೂ ಗಲಭೆ, ಗಲಾಟೆ, ವಾಹನಗಳಿಗೆ ಬೆಂಕಿ ಹಚ್ಚುವುದು, ಆಸ್ತಿಪಾಸ್ತಿ ನಷ್ಟ,ರಾಜಕೀಯ ಹೇಳಿಕೆಗಳಿಂದ ಹೈರಾಣಗೊಂಡಿದ್ದ ನಗರದ ಪರಿಸ್ಥಿತಿ ಈಗ ಹತೋಟಿಗೆ ಬಂದಿದೆ.


ಆದರೂ ಕೂಡ ಕರ್ಫ್ಯೂವನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿದ್ದು ಪೊಲೀಸ್ ಬಿಗಿಬಂದೋಬಸ್ತ್ ಹೆಚ್ಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಕರ್ಫ್ಯೂ ವಿಧಿಸಿದ್ದರಿಂದ ಇಡೀ ಶಿವಮೊಗ್ಗ ನಗರದಲ್ಲಿ ವ್ಯಾಪಾರ ವಹಿವಾಟುಗಳುಸ್ಥಗಿತಗೊಂಡಿದ್ದವು. ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೋಲ್ ಬಂಕ್, ಹಾಲಿನ ಅಂಗಡಿ,
ಕೆಲವು ಹೊಟೆಲ್ ಗಳನ್ನು ಬಿಟ್ಟರೆ ಮತ್ಯಾವುದೇ ರೀತಿಯ ಅಂಗಡಿಗಳು ತೆರೆದಿರಲಿಲ್ಲ.ಗಾಂಧಿ ಬಜಾರ್, ಎನ್.ಟಿ. ರಸ್ತೆ, ಓ.ಟಿ. ರಸ್ತೆ, ಸೀಗೇಹಟ್ಟಿ, ಲಷ್ಕರ್ ಮೊಹಲ್ಲಾ,ಕ್ಲಾರ್ಕ್ ಪೇಟೆ, ಭಾರತೀ ಕಾಲೋನಿ ಸೇರಿದಂತೆ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ಜನರಓಡಾಟವೇ ಇರಲಿಲ್ಲ. ಸಾರ್ವಜನಿಕರು ಮನೆಯಿಂದ ಹೊರಬರುತ್ತಿರಲಿಲ್ಲ. ಪೊಲೀಸ್ ವಾಹನಗಳ ಓಡಾಟ ಬಿಟ್ಟರೆ ಹಳೆ ಶಿವಮೊಗ್ಗ ಭಾಗದಲ್ಲಿ ಸಂಪೂರ್ಣ ಬಂದ್ ವಾತಾವರಣ ಇತ್ತು.ದುರ್ಗಿಗುಡಿ, ಕುವೆಂಪುರಸ್ತೆ, ಸವಳಂಗರಸ್ತೆ, ಆಲುಕೊಳ ರಸ್ತೆ, ಮುಂತಾದಕಡೆ ಜನರ ಓಡಾಟ ವಿರಳವಾಗಿತ್ತು. ಅಗತ್ಯ ಕೆಲಸಗಳಿಗಷ್ಟೇ ದ್ವಿಚಕ್ರವಾಹನ ಸವಾರರು ಪ್ರಯಾಣಿಸುತ್ತಿದ್ದುದು ಕಂಡುಬಂದಿತು. ಕೆಲ ಆಟೋಗಳ ಸಂಚಾರವಿದ್ದಿದ್ದರಿಂದ
ಸಾರ್ವಜನಿಕರಿಗೆ ಅನುಕೂಲವಾಗಿತ್ತು. ಅಲ್ಲಲ್ಲಿ ಟೀ ಗೂಡಂಗಡಿಗಳು ತೆರೆದಿದ್ದು ಕಂಡುಬಂದಿತು. ಒಟ್ಟಾರೆ ಇಡೀ ಶಿವಮೊಗ್ಗ ನಗರ ಶಾಂತ ಸ್ಥಿತಿಯತ್ತ ಸಾಗಿರುವುದು ಕಂಡುಬಂದಿದೆ.

ಪೊಲೀಸ್ ಬಿಗಿಬಂದೋಬಸ್ತ್:

ಶಿವಮೊಗ್ಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ಬಿಗಿ ಬಂದೋಬಸ್ತ್ ಗೆ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ಪರಿಸ್ಥಿತಿಯನ್ನು ನಿಯಂತ್ರಿಸಲು ಮೂವರು ಎಸ್.ಪಿ., ಓರ್ವ ಹೆಚ್ಚುವರಿ ಎಸ್.ಪಿ., 12 ಡಿವೈಎಸ್ ಪಿ, 39 ಪಿ.ಐ., 54 ಪಿಎಸ್ ಐ 48 ಎಎಸ್ ಐ, 819 ಪಿಸಿ, 24 ಕೆಎಸ್ಆರ್ಪಿ ತುಕಡಿಗಳು, 10 ಡಿಎಆರ್ ತುಕಡಿ, 1 ಆರ್.ಎ.ಎಫ್ ತುಕಡಿಗಳನ್ನು ನಿಯೋಜಿಸಲಾಗಿತ್ತು. ಇಂದು ಎಎನ್ ಎಫ್
ತಂಡ ನಗರಕ್ಕಾಗಮಿಸಿದ್ದು, ಬಂದೋಬಸ್ತ್ ಕಾರ್ಯದಲ್ಲಿ ತೊಡಗಿದೆ.  ಪೊಲೀಸರು ಹಗಲು ರಾತ್ರಿ ಕಣ್ಗಾವಲು ಕಾಯುತ್ತಿದ್ದು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುತ್ತಿದ್ದಾರೆ.

7 ಡ್ರೋಣ್ ಕ್ಯಾಮೆರಾ ಬಳಕೆ:

ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ದುಷ್ಕರ್ಮಿಗಳ ಚಲನವಲನ ಗಮನಿಸಲು 7 ಡ್ರೋಣ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ. ಇದಕ್ಕಾಗಿ  4 ತಂಡಗಳನ್ನು ಕೇರಳ,ಮಂಡ್ಯ, ಉತ್ತರ ಕನ್ನಡ, ಕರಾವಳಿ ರಕ್ಷಣಾ ಪಡೆಯ 20ಕ್ಕೂ ಹೆಚ್ಚು ಪೊಲೀಸರ ತಂಡ ಆಗಮಿಸಿದ್ದು, ಶಿವಮೊಗ್ಗ ನಗರವನ್ನು ಗ್ರೌಂಡ್ ಕಣ್ಗಾವಲಲ್ಲಿ ಪರಿಶೀಲನೆ ಮಾಡಲಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಮಾಧ್ಯಮದವರ ಜೊತೆ ಮಾತನಾಡಿ,ಪರಿಸ್ಥಿತಿ ಹತೋಟಿಯಲ್ಲಿದೆ. ಆದರೂ ಸಹ ಅಹಿತಕರ ಘಟನೆಗಳ ತಡೆಗೆ ಮತ್ತು ಪರಿಶೀಲಿಸಲು ರಾಜ್ಯದ ವಿವಿಧ ಕಡೆಗಳಿಂದ 7 ಡ್ರೋಣ್ ಕ್ಯಾಮೆರಾಗಳನ್ನು ತರಿಸಲಾಗಿದೆ. ವಿಶೇಷ ಕಟ್ಟೆಚ್ಚರ ವಹಿಸಲಾಗಿದೆ. ಡ್ರೋಣ್ ಕ್ಯಾಮೆರಾಗಳನ್ನು ಎಲ್ಲೆಲ್ಲಿ ಬಳಸಬೇಕುಎನ್ನುವುದನ್ನು ನಿರ್ಧರಿಸಲಾಗುವುದು. ಒಟ್ಟಾರೆ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಮತ್ತಿಬ್ಬರು ವಶಕ್ಕೆ:

ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯವರೆಗೆ 6 ಜನರನ್ನು
ಬಂಧಿಸಲಾಗಿತ್ತು. ಇಂದು ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆಮತ್ತಷ್ಟು ಚುರುಕುಗೊಳಿಸಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.


ಸೂಕ್ತ ತನಿಖೆಗೆ ಗೃಹ ಸಚಿವರ ಸೂಚನೆ:

ಶಿವಮೊಗ್ಗದಲ್ಲಿ ನಡೆದ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪ್ರಕರಣಕ್ಕೆ ಕುರಿತು ಬಂಧಿಸಿರುವ 8 ಜನ ಆರೋಪಿಗಳ ಪೈಕಿ ಕೆಲವರ ಮೇಲೆ ಈ ಹಿಂದೆ ದೊಡ್ಡಪೇಟೆ, ಕೋಟೆ ಠಾಣೆಗಳಲ್ಲಿ
ಪ್ರಕರಣಗಳು ದಾಖಲಾಗಿವೆ. ಕ್ರಿಮಿನಲ್ ಹಿನ್ನೆಲೆ ಉಳ್ಳ ಈ ಆರೋಪಿಗಳ ವಿವರಗಳು ಹಾಗೂ ಆ ಠಾಣೆಗಳಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತೆಗೆದುಕೊಂಡ ಕ್ರಮಗಳು ಏನು ಎಂದು ಮಾಹಿತಿ ಕೇಳಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸಮಾಜ ಘಾತುಕ ಶಕ್ತಿಗಳ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರದ ಬಗ್ಗೆಯೂ ಅನುಮಾನಗಳಿವೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಸಹ ಬಂದಿದೆ. ಈ ಬಗ್ಗೆಯೂ
ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ:

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೊಡ್ಡಪೇಟೆ ಠಾಣೆ ಹಾಗೂ ತುಂಗಾ ನಗರ ಠಾಣೆ ವ್ಯಾಪ್ತಿಗೆ  ಇಬ್ಬರು ಹಾಗೂ ಪ್ರತಿ ಠಾಣೆಗೆ ಒಬ್ಬರಂತೆ 7 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ ಮಾಡಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಗೆ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರವಿಚಂದ್ರ ನಾಯಕ್, ಶಿವಮೊಗ್ಗ ವೈದ್ಯಕೀಯ
ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್, ಕೋಟೆ ಠಾಣೆ ವ್ಯಾಪ್ತಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೊಟ್ರೇಶ್, ತುಂಗಾ ನಗರ ಠಾಣೆ ವ್ಯಾಪ್ತಿಗೆ ಮಹಾನಗರ ಪಾಲಿಕೆ ಉಪ ಆಯುಕ್ತ ಪ್ರಮೋದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್,ವಿನೋಬ ನಗರ ಠಾಣೆಗೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ್ ಕುಮಾರ್ ಅವರುಗಳನ್ನು ನೇಮಕ ಮಾಡಲಾಗಿದೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *

Exit mobile version