ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದ ಚೆಕ್ ಡ್ಯಾಂ ನಿರ್ಮಾಣದ ವೇಳೆ ಏರಿ ಹೊಯ್ಯಲು ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ದೃಶ್ಯ ವೈರಲ್ ಆಗಿದೆ.
ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹಳೇಮಂಡಿಯ ನೀರು ಶುದ್ಧೀಕರಣ ಘಟಕದ ಸಮೀಪದ ತುಂಗಾ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ.
ನಗರಕ್ಕೆ 24 ಗಂಟೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಭಾಗವಾಗಿ ಈ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕಾಗಿ ಮಣ್ಣಿನ ಏರಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ನಗರಪಾಲಿಕೆಯ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಈ ಕಾಮಗಾರಿಯನ್ನು ನಡೆಸುತ್ತಿದೆ.
ಈ ಕಾಮಗಾರಿಗೆ ಸಮೀಪದ ಹಿಂದೂ ರುದ್ರಭೂಮಿಯಿಂದ ಮಣ್ಣನ್ನು ತಂದು ಹಾಕಲಾಗುತ್ತಿದೆ. ಈ ವೇಳೆ, ರುದ್ರಭೂಮಿಯಲ್ಲಿ ಇತ್ತೀಚೆಗೆ ತಾನೇ ಹೂತಿರುವ ಶವಗಳನ್ನೂ ಸೇರಿಸಿ ಟ್ರ್ಯಾಕ್ಟರುಗಳಲ್ಲಿ ಮಣ್ಣು ತುಂಬಿಕೊಂಡು ಬಂದು ಏರಿಗೆ ಸುರಿಯುತ್ತಿರುವುದು ಬೆಳಕಿಗೆ ಬಂದಿದೆ! ಸ್ಥಳೀಯರು ಟ್ರ್ಯಾಕ್ಟರುಗಳಲ್ಲಿ ಮಣ್ಣಿನೊಂದಿಗೆ ಶವವನ್ನೂ ಸಾಗಿಸುತ್ತಿರುವುದನ್ನು ಪತ್ತೆ ಮಾಡಿ ನಗರಪಾಲಿಕೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಈ ಆಘಾತಕಾರಿ ಪ್ರಕರಣ ಹೊರಬಂದಿದೆ.
ಸ್ಥಳೀಯರ ಪ್ರಕಾರ, ವಾಸ್ತವವಾಗಿ ಸ್ಮಶಾನದ ಮಣ್ಣು ತೆಗೆದು ನದಿಗೆ ಚೆಕ್ ಡ್ಯಾಂ ಕಟ್ಟುತ್ತಿರುವುದೇ ಅಪಾಯಕಾರಿ ಮತ್ತು ಆಘಾತಕಾರಿ. “ಕಳೆದ ಒಂದು ವಾರದಲ್ಲಿ ಏರಿ ಹೊಯ್ಯಲು ಸಾಗಿಸುವ ಮಣ್ಣಿನಲ್ಲಿ ಐದಾರು ಶವಗಳನ್ನು ಕಂಡಿದ್ದೇವೆ. ಈಗಾಗಲೇ ಆ ಶವಗಳು ಏರಿಯಲ್ಲಿ ಮುಚ್ಚಿಹೋಗಿವೆ.
ಮೊನ್ನೆಯ ಪ್ರಕರಣದಲ್ಲಿ ಮಾತ್ರ ಅದನ್ನು ಮೊಬೈಲ್ ನಲ್ಲಿ ವೀಡಿಯೋ ಮಾಡಿ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಕಳಿಸಿದ್ದರಿಂದ ಬೆಳಕಿಗೆ ಬಂದಿದೆ. ಟ್ರ್ಯಾಕ್ಟರಿನಲ್ಲಿ ಮಣ್ಣಿನ ಜೊತೆ ಶವವನ್ನೂ ತುಂಬಿಕೊಂಡು ಹೋಗುತ್ತಿರುವುದು ಫೋಟೋ, ವೀಡಿಯೋ ಸಹಿತ ದಾಖಲಾಗಿದ್ದರಿಂದ ಸಾಕ್ಷಿ ಸಿಕ್ಕಿದೆ ಅಷ್ಟೇ. ಸಾಕ್ಷಿ ಸಿಗದೇ ಮಣ್ಣಿನಲ್ಲಿ ಮುಚ್ಚಿಹೋದ ಶವಗಳು ಇನ್ನೆಷ್ಟೋ..” ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯರು ದಾಖಲೆ ಸಹಿತ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ನಗರಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಆಯುಕ್ತರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗುತ್ತಿಗೆದಾರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
ಆದರೆ, ಕುಡಿಯುವ ನೀರಿನ ಚೆಕ್ ಡ್ಯಾಂ ನಿರ್ಮಾಣಕ್ಕೆ ಸ್ಮಶಾನದ ಮಣ್ಣು ಬಳಸಿರುವುದು ಅಕ್ರಮ ಮಾತ್ರವಲ್ಲ; ಅಪರಾಧ. ಜೊತೆಗೆ ಶವವನ್ನೂ ನೋಡಿಯೂ ಅದೇ ಶವಗಳನ್ನು ಮಣ್ಣಲ್ಲಿ ಮುಚ್ಚಿ ಏರಿ ನಿರ್ಮಾಣ ಮಾಡಿರುವುದಾಗಿ ಸ್ಥಳೀಯರು ಹೇಳುತ್ತಿದ್ದಾರೆ. ಒಂದು ಕಡೆ ಮೃತ ದೇಹಕ್ಕೆ ಸಲ್ಲಿಸಬೇಕಾದ ಗೌರವಕ್ಕೆ ಚ್ಯುತಿ ಮತ್ತೊಂದು ಕಡೆ ಲಕ್ಷಾಂತರ ಮಂದಿಯ ಕುಡಿಯುವ ನೀರನ್ನು ಮಲಿನಗೊಳಿಸಿದ ಮನುಷ್ಯತ್ವದ ವಿರುದ್ಧದ ಹೇಯ ಅಪರಾಧ.
ಆದರೆ, ಈ “ವಿಷಯದಲ್ಲಿ ಮಹಾನಗರಪಾಲಿಕೆಯಾಗಲೀ, ಜಿಲ್ಲಾಡಳಿತವಾಗಲೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತಿಲ್ಲ. ಬದಲಾಗಿ ಗುತ್ತಿಗೆದಾರನಿಗೆ ಯಾವುದೋ ಸಣ್ಣಪುಟ್ಟ ಕಳಪೆ ಕಾಮಗಾರಿ ಮಟ್ಟದಲ್ಲಿ ಈ ಕೃತ್ಯವನ್ನು ಪರಿಗಣಿಸಿ ನೋಟೀಸ್ ನೀಡಿ ತಿಪ್ಪೆ ಸಾರಿಸುವ ಯತ್ನ ನಡೆಯುತ್ತಿದೆ. ಇದು ಅನ್ಯಾಯ. ಬಿಜೆಪಿ ಮಹಾನಗರ ಪಾಲಿಕೆ ಆಡಳಿತ ನಗರದ ಜನರನ್ನು ಎಷ್ಟು ಲಘುವಾಗಿ ಪರಿಗಣಿಸಿದೆ ಎಂಬುದಕ್ಕೆ ಇದಕ್ಕಿಂತ ಮತ್ತೊಂದು ನಿದರ್ಶನ ಬೇಕಿಲ್ಲ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೀಡಿಯೋ ಇಲ್ಲಿ ವೀಕ್ಷಿಸಿ 👇👇👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್