ಶಿವಮೊಗ್ಗ: ಪ್ರಿಯಕರ ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಕ್ಕೆ ಪ್ರೇಯಸಿ ಮದುವೆ ದಿನವೇ ನೇಣಿಗೆ ಶರಣಾಗಿರುವ ಘಟನೆ ನಗರದ ಓ.ಟಿ.ರಸ್ತೆಯಲ್ಲಿ ನಡೆದಿದೆ.
ರೂಪಶ್ರೀ ಮೃತ ದುರ್ದೈವಿ. ರೂಪಶ್ರೀ ಅವರು ಮುರುಳಿ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಮುರುಳಿ ಬೇರೆ ಯುವತಿಯ ಜೊತೆ ಮದುವೆ ಆಗಿದ್ದರು. ಇದರಿಂದ ನೊಂದ ರೂಪಶ್ರೀ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಮುರುಳಿ ತನ್ನ ಮನೆಯವರು ನಿಶ್ಚಯಿಸಿದ್ದ ಯುವತಿಯ ಜೊತೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭ ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜರುಗಿತ್ತು. ಇತ್ತ ಮುರುಳಿ ಮದುವೆಯಾದ ಮೂಹೂರ್ತದ ಸಮಯಕ್ಕೆ ರೂಪಶ್ರೀ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಇದಾದ ನಂತರ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ರೂಪಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಮದುವೆ ಮನೆಯಿಂದಲೇ ಮುರಳಿ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆತನ ಹುಡುಕಾಟದಲ್ಲಿ ಕಾರ್ಯನಿರತರಾಗಿದ್ದಾರೆ.
ಆಶ್ಚರ್ಯಕರ ಸಂಗತಿಯಂದರೆ ಮುರುಳಿ ಮದುವೆಯಾದ ಯುವತಿಗೆ ಈ ವಿಚಾರ ತಿಳಿದು, ಆಕೆಯೂ ಸಹ ಸಮುದಾಯ ಭವನದಲ್ಲಿಯೇ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರೂಪಶ್ರೀ ಸಹ್ಯಾದ್ರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಪಿಹೆಚ್ಡಿ ಅಂತಿಮ ಹಂತಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕಾಲೇಜಿಗೆ ಹೋಗುತ್ತಿರಲಿಲ್ಲ. ಮುರುಳಿ ಸಹ ನಗರದ ಡಿವಿಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಇವರಿಬ್ಬರು ಕಾಲೇಜು ದಿನಗಳಲ್ಲಿಯೇ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ರೂಪಶ್ರೀಗೆ ತಂದೆ-ತಾಯಿ ಹಾಗೂ ಒಬ್ಬ ತಮ್ಮನಿದ್ದಾನೆ. ತಂದೆ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದಾರೆ. ತಮ್ಮ ಅಡುಗೆ ಕೆಲಸಕ್ಕೆ ಹೋಗುತ್ತಿದ್ದಾರೆ. ಬಡ ಕುಟುಂಬವಾದ್ರೂ ಸಹ ಮಕ್ಕಳನ್ನು ಚೆನ್ನಾಗಿಯೇ ಸಾಕಿದ್ದರು. ಕಷ್ಟವಾದರು ಸಹ ಮಗಳು ಪಿಹೆಚ್ಡಿ ಪದವಿ ಪಡೆಯುತ್ತಿರುವುದು ಕುಟುಂಬಕ್ಕೆ ಸಂತೋಷವನ್ನುಂಟು ಮಾಡಿತ್ತು.
ಕಳೆದ ತಿಂಗಳಲ್ಲೂ ಕೂಡ ರೂಪಶ್ರೀ ತನ್ನ ಮನೆಯಲ್ಲಿಯೇ ವಿಷ ಕುಡಿದಿದ್ದರು. ತಾನು ಓರ್ವನನ್ನು ಪ್ರೀತಿಸುತ್ತಿದ್ದು, ಆತನನ್ನೇ ಮದುವೆ ಆಗುವುದಾಗಿ ಆ ವೇಳೆ ಹೇಳಿದ್ದರು. ರೂಪಶ್ರೀ ಮನೆಯವರು ಮುರುಳಿ ಮನೆಯವರ ಬಳಿ ಹೋಗಿ ಮಾತನಾಡಿದಾಗ ಅವರಿಬ್ಬರು ಜಸ್ಟ್ ಫ್ರೆಂಡ್ಸ್ ಎಂದು ಹೇಳಿ ಕಳುಹಿಸಿದ್ದರಂತೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್