ಬಾಲ್ಯ ವಿವಾಹ ನಿಷೇಧ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 6ರಿಂದ ಜಿಲ್ಲೆಯಾದ್ಯಂತ `ವೀಡಿಯೋ ಆನ್ ವೀಲ್ಸ್’ ಅಭಿಯಾನ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನದ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.
ಅಭಿಯಾನ ಜಿಲ್ಲೆಯ 41 ಹೋಬಳಿಗಳಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸಂಚಾರಿ ವಾಹನದ ಮೂಲಕ ಬಾಲ್ಯ ವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ವಿಡಿಯೋಗಳನ್ನು ಪ್ರದರ್ಶಿಸಲಾಗುವುದು. ಎಲ್ಲಾ ಹೋಬಳಿ ಹಂತಗಳಲ್ಲಿ ಅಭಿಯಾನದ ಜ್ಯೋತಿ ಸಂಚರಿಸಲಿದೆ. ಬಾಲ್ಯ ವಿವಾಹ ನಿಷೇಧ ಕುರಿತು ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ, ಸಹಿ ಅಭಿಯಾನ, ಮಾನವ ಸರಪಳಿ ಮೂಲಕ ಜಾಗೃತಿ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ, ಕರಪತ್ರಗಳ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಹೋಬಳಿ ಕೇಂದ್ರಸ್ಥಾನಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ, ಬಸ್ ನಿಲ್ದಾಣ, ಸಂತೆ, ಪ್ರಮುಖ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಬಾಲ್ಯ ವಿವಾಹ ನಡೆಯದಂತೆ ಮತ್ತು ಬಾಲ್ಯ ವಿವಾಹ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸುವ ಕುರಿತು ಠರಾವು ಹೊರಡಿಸಬೇಕು. ಬಾಲ್ಯ ವಿವಾಹದಿಂದಾಗಿ ಮಕ್ಕಳ ಮೇಲೆ ಉಂಟಾಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳ ಕುರಿತು ಆರೋಗ್ಯ ಇಲಾಖೆ ವತಿಯಿಂದ ಅರಿವು ಮೂಡಿಸುವ ಕಾರ್ಯವನ್ನು ಈ ಅವಧಿಯಲ್ಲಿ ಮಾಡಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಚಾಲನೆ: ಮಾರ್ಚ್ 6ರಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಮತ್ತಿತರ ಗಣ್ಯರು ಉಪಸ್ಥಿತರಿರುವರು.
ಪ್ರತಿಜ್ಞಾ ವಿಧಿ ಬೋಧನೆ: ಬಾಲ್ಯ ವಿವಾಹ ನಿಷೇಧ ಕುರಿತಾದ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಬೋಧಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.