ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ.
ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ ಹಾಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರಿಗೆ ಬೇಕಾಗಿದ್ದ ಮುಸ್ತಾಕನನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದು, ಆತ ಮುಸ್ಲಿಂ ಅಲ್ಲ, ಹಿಂದೂ ಯುವಕನೆಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಪ್ರಚೋದನಕಾರಿ ಕಾಮೆಂಟ್ಗಳಿಗೆ ಸಂಬಂಧಿಸಿದಂತೆ ಬಾಗಲಕೋಟೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
“ತನಿಖೆಯ ನಂತರ ಆರೋಪಿಯು ನಕಲಿ ಪ್ರೊಫೈಲ್ ಸೃಷ್ಟಿಸಿದ್ದ ವ್ಯಕ್ತಿ ಸಿದ್ದಾರೂಢ ಶ್ರೀಕಾಂತ್ ಎಂದು ತಿಳಿದುಬಂದಿದೆ. ಆರೋಪಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುವ ದುರುದ್ದೇಶಪೂರಿತ ಉದ್ದೇಶಗಳಿಗಾಗಿ ಈ ಪ್ರೊಫೈಲ್ ಅನ್ನು ಬಳಸುತ್ತಿದ್ದರು. ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಎಸ್ಪಿ ತಿಳಿಸಿದ್ದಾರೆ.