ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ ಬೇರೆಯವರೆಲ್ಲ ಸೇರಿ, ಕೊಲೆ ಸಂಚಿಗೆ ತಯಾರಿ ಮಾಡಿದ್ದಾರೆ. ಶಿವಮೊಗ್ಗ ಪೊಲೀಸರು ಬುದ್ಧಿವಂತಿಕೆ ಪ್ರದರ್ಶಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಕ್ರಮ ತೆಗೆದುಕೊಳ್ಳದಿದ್ದರೆ ರಾಜ್ಯದಲ್ಲಿ ಕೋಮು ಗಲಭೆ ನಡೆಯುವ ಸಂಭವವಿತ್ತು. ಈ ಪ್ರಕರಣದ ಎಫ್ ಐಆರ್ ಪ್ರತಿ ನನ್ನ ಬಳಿ ಇದೆ. ಟ್ರಸ್ಟ್ ಸದಸ್ಯನೂ ಆಗಿರುವ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದು, ಆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಹತ್ಯೆ ಯತ್ನ ಪ್ರಕರಣದ ಸೂಕ್ತ ತನಿಖೆ ನಡೆದರೆ, ಆ ಟ್ರಸ್ಟ್ ಯಾವುದು, ಅದರಲ್ಲಿ ಯಾರೆಲ್ಲಾ ಪ್ರಭಾವಿಗಳು ಇದ್ದಾರೆ, ಕೊಲೆ ಸಂಚಿನಲ್ಲಿ ಅವರ ಪಾತ್ರ ಏನಿದೆ ಎಂಬುದು ಬಹಿರಂಗವಾಗಲಿದೆ ಎಂದರು.
ಸಂತೋಷ್ ಪಾಟೀಲ್ ಪ್ರಕರಣದಲ್ಲೂ ನಿಮ್ಮ ಕಡೆ ಕೈ ತೋರಿಸುವ ಪ್ರಯತ್ನವಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅವರು ಕೈ ತೋರಿಸಲಿ, ಯಾರು ಬೇಡ ಎಂದರು. ನಾನು ಯಾವುದೇ ಕೆಲಸಕ್ಕೂ ಡಬಲ್ ಬಿಲ್ ಹಾಕಿ ಕೆಲಸ ಮಾಡಿಲ್ಲ. ಸಮಯ ಬಂದಾಗ ನಾನು ಮಾತನಾಡುತ್ತೇನೆ’ ಎಂದು ಉತ್ತರಿಸಿದರು.
ವೈಷಮ್ಯದಿಂದ ಸಣ್ಣ ಗುತ್ತಿಗೆದಾರರ ಟೆಂಡರ್ ರದ್ದು ಬಗ್ಗೆ ಕೇಳಿದ ಪ್ರಶ್ನೆಗೆ, ‘ಈಗ ನಾನು ಆ ಬಗ್ಗೆ ಮಾತನಾಡುವುದಿಲ್ಲ. ಕೆಂಪಣ್ಣನವರು ದೂರು ಕೊಟ್ಟ ನಂತರ ಗುತ್ತಿಗೆದಾರರನ್ನು ಮಟ್ಟ ಹಾಕಲು ಸಂಚು ನಡೆಯುತ್ತಿದೆ. ಎಲ್ಲ ಸಣ್ಣ ಗುತ್ತಿಗೆದಾರರು ಕೆಲಸ ಮಾಡಿಕೊಂಡು ಬದುಕಬೇಕು. ಹೀಗಾಗಿ ನಾನು ಜನರ ಅಭಿಪ್ರಾಯ ಪಡೆಯಲು ಪ್ರಯತ್ನಿಸುತ್ತಿದ್ದೇನೆ’ ಎಂದರು.
“ನಾವು ಸಂತೋಷ್ ಪ್ರಕರಣದಲ್ಲಿ ತನಿಖೆ ಮಾಡುತ್ತಿದ್ದು, ಕಾಂಗ್ರೆಸ್ ನವರು ಕೆ.ಜೆ.ಜಾರ್ಜ್ ರನ್ನು ರಕ್ಷಿಸಲು ಪ್ರಯತ್ನ ಮಾಡಿದ್ದರು” ಎಂಬ ಮುಖ್ಯಮಂತ್ರಿಯ ಆರೋಪದ ಬಗ್ಗೆ ಪ್ರಶ್ನೆ ಕೇಳಿದಾಗ, ಮುಖ್ಯಮಂತ್ರಿ ಬೊಮ್ಮಾಯಿ ಎಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ?. ಅವರು ಕೂಡ ಅಪರಾಧದಲ್ಲಿ ಭಾಗಿಯಾಗಿದ್ದಾರೆ. ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ದೂರಿನಲ್ಲಿ 40 ಶೇ. ಕಮಿಷನ್ ವಿಚಾರ ಪ್ರಸ್ತಾಪವಾಗಿದ್ದು, ಯಾವ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುವ ಮುನ್ನವೇ ಮುಖ್ಯಮಂತ್ರಿ ಹಾಗೂ ಯಡಿಯೂರಪ್ಪ ಅದು ಹೇಗೆ ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ, ಅವರು 3 ತಿಂಗಳಲ್ಲಿ ನಿರ್ದೋಷಿಯಾಗಿ ಬರುತ್ತಾರೆ, ಮತ್ತೆ ಮಂತ್ರಿ ಆಗುತ್ತಾರೆ ಎಂದು ಹೇಳಲು ಸಾಧ್ಯ? ಅವರು ನ್ಯಾಯಾಧೀಶರೆ? ಇದರಿಂದ ಸರ್ಕಾರ ತನಿಖೆ ಮೇಲೆ ಪರಿಣಾಮ ಬೀರಿದಂತಾಗುವುದಿಲ್ಲವೇ? ಮುಖ್ಯಮಂತ್ರಿ ಕ್ಲೀನ್ ಚಿಟ್ ಕೊಟ್ಟರೆ ತನಿಕಾಧಿಕಾರಿಗಳು ಹೇಗೆ ತನಿಖೆ ಮಾಡುತ್ತಾರೆ? ಅವರೇ ಆರೋಪಿಗೆ ರಕ್ಷಣೆ ಕೊಟ್ಟಂತೆ ಆಗುತ್ತದೆ ಅಲ್ಲವೇ? ಲಂಚ ಪಡೆದಿರುವ ಕಳ್ಳ, ಕೊಲೆಗಡುಕನಿಗೆ ರಕ್ಷಣೆ ಕೊಡುವುದು ತಪ್ಪಲ್ಲವೇ? ಅವರನ್ನು ಪ್ರಜ್ಞಾವಂತ ಸಿಎಂ ಎಂದುಕೊಂಡಿದ್ದೆ. ಆದರೆ ಇವರು ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಕೊಟ್ಟ ಹೇಳಿಕೆಯೇ ರಾಜ್ಯದಲ್ಲಿ ಈ ಎಲ್ಲ ದುರಾಡಳಿತಕ್ಕೆ ಕಾರಣವಾಗಿದೆ ಎಂದರು.
ಈಶ್ವರಪ್ಪನವರ ಬಂಧನ ಅಗತ್ಯವಿಲ್ಲ ಎಂಬ ಮುಖ್ಯಮಂತ್ರಿ ಹೇಳಿಕೆ ವಿಚಾರವಾಗಿ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಡಿಕೆಶಿ, ಬಂಧಿಸುವುದು ನಂತರದ ವಿಚಾರ. ಆದರೆ ಮೊದಲು ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಅದರ ಬದಲು ಮುಖ್ಯಮಂತ್ರಿಯೇ ಜಡ್ಜ್ ಆಗಿ ಕ್ಲೀನ್ ಚಿಟ್ ನೀಡುತ್ತಿದ್ದಾರೆ. ನಾವು ಈ ನೆಲದ ಕಾನೂನು ರಕ್ಷಣೆಗೆ ಜನರ ಮುಂದೆ ಹೋಗುತ್ತೇವೆ. ನಮ್ಮ ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿ ತಿಳಿಸುತ್ತೇವೆ’ ಎಂದು ಉತ್ತರಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್