ಶಿವಮೊಗ್ಗ: ಸಂಗಮೇಶ್ವರ್ ಅವರಿಗೆ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಸದಸ್ಯತ್ವ ಅಭಿಯಾನಕ್ಕೆ ಹಿನ್ನೆಡೆಯಾಗಿತ್ತು. ಹೀಗಾಗಿ ನಾನೇ ಭದ್ರಾವತಿಗೆ ಬಂದು ಸದಸ್ಯತ್ವ ಅಭಿಯಾನಕ್ಕೆ ಚುರುಕು ಮುಟ್ಟಿಸಿದ್ದೇನೆ. ನಾಯಕರ ಬಳಿ ಚರ್ಚೆ ಮಾಡುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಭದ್ರಾವತಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಎಂದರೆ ನನಗೆ ಪ್ರೀತಿ ಹಾಗೂ ಶಿವಮೊಗ್ಗ ಬರಬೇಕು ಎಂಬುದು ನನ್ನ ಆಸೆ. ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭ ಸದಸ್ಯರು. ಕಾಂಗ್ರೆಸ್ ಸದಸ್ಯರ ಸಂಖ್ಯೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಬೇಕಿದೆ. ಶಿವಮೊಗ್ಗದಿಂದ ಇಡೀ ರಾಜ್ಯಕ್ಕೆ, ಸಂವಿಧಾನಕ್ಕೆ, ರಾಷ್ಟ್ರಧ್ವಜಕ್ಕೆ ಅವಮಾನವಾಗುತ್ತಿದೆ. ಯಡಿಯೂರಪ್ಪ ಜಿಲ್ಲೆಯಲ್ಲಿ ಒಂದಿಷ್ಟು ಅಭಿವೃದ್ಧಿ ಮಾಡಿದ್ದಾರೆ. ಆದರೆ, ಶಿವಮೊಗ್ಗದಲ್ಲಿ ನಡೆಯುತ್ತಿರುವ ರಾಜಕಾರಣದಿಂದ ಮುಂದಿನ ದಿನಗಳಲ್ಲಿ ಯಾವುದೇ ಉದ್ಯಮಿಗಳು ಇಲ್ಲಿ ಬಂಡವಾಳ ಹೂಡಲು ಬರುವುದಿಲ್ಲ.
ಹಿಂದೆ ಉಡುಪಿ ಮಂಗಳೂರಿನಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿತ್ತು. ಜನರೇ ಎಚ್ಚರವಾಗಿರಿ, ನಿಮ್ಮ ಬದುಕು ಹುಷಾರು. ಬಿಜೆಪಿಯವರು ರೈತರ ಆದಾಯ ದ್ವಿಗುಣ ಮಾಡುತ್ತೇನೆ ಎಂದಿದ್ದರು, ಆದರೆ ಅದು ಆಗಲಿಲ್ಲ. ಈ ಕಾರಣಕ್ಕಾಗಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬದಲಾವಣೆ ತರಬೇಕಿದೆ. ಬಿಜೆಪಿಯವರಿಗೆ ವೋಟು ಬೇಕು, ಸೀಟು ಬೇಕು. ಆದರೆ, ರಾಜ್ಯ ಉದ್ಧಾರವಾಗಬೇಕು ಎಂಬುದು ನಮ್ಮ ಆಸೆ. ಪ್ರತಿದಿನ ಒಂದೊಂದು ಹೊಸ ವಿಚಾರ ಮುನ್ನೆಲೆಗೆ ತಂದು ರಾಜ್ಯಕ್ಕೆ ಕಪ್ಪು ಚುಕ್ಕೆ ತರುತ್ತಿದ್ದಾರೆ. ನಮ್ಮ ಸ್ವಾಭಿಮಾನ ಕಳೆದುಕೊಳ್ಳಲು ನಾವು ತಯಾರಿಲ್ಲ. ಸ್ಥಳೀಯವಾಗಿ ಉದ್ಯೋಗಗಳು ಸೃಷ್ಟಿಯಾಗಬೇಕಿದೆ.
ಶಿವಮೊಗ್ಗದಲ್ಲಿ ಏರ್ಪೋರ್ಟ್ ಆಗುತ್ತಿದೆ. ಆದರೆ, ಇಲ್ಲಿ ದಿನ ಗಲಾಟೆ ನಡೆದು ಸೆಕ್ಷನ್ 144 ಜಾರಿಯಲ್ಲಿದ್ದರೆ ಯಾರು ಬರ್ತಾರೆ. ತಿನ್ನಲಿಕ್ಕೆ, ಉಣ್ಣಲು ನಿರ್ಬಂಧ ಹೇರುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರಕ್ಕೆ ಮಾನವೀಯತೆಯೇ ಇಲ್ಲ. ಇದು ಅತಿ ಭ್ರಷ್ಟ ಸರ್ಕಾರ, 40 ಪರ್ಸೆಂಟ್ ಸರ್ಕಾರ ಎಂದು ನಾವು ಆರೋಪ ಮಾಡಿಲ್ಲ. ಬದಲಿಗೆ ಕಂಟ್ರಾಕ್ಟರ್ ಅಸೋಸಿಯೇಷನ್ನವರೇ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಇಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಎಲ್ಲರೂ ಪಕ್ಷದ ಪೂಜೆ ಮಾಡಬೇಕು.
ಮನೆಮನೆಗೆ ಹೋಗಿ ಜನರ ಹೃದಯ ಗೆಲ್ಲುವ ಕೆಲಸ ಮಾಡಿ. ಜನರು ಈ ಭ್ರಷ್ಟ ಸರ್ಕಾರ ತೆಗೆಯಲು ನಿರ್ಧರಿಸಿದ್ದಾರೆ. ಬೆಲೆ ಏರಿಕೆ ದಿನೇ ದಿನೇ ಹೆಚ್ಚುತ್ತಿದೆ. ಆದಾಯ ಪಾತಾಳಕ್ಕೆ ಹೋಗುತ್ತಿದೆ. ಆದರೆ ಖರ್ಚು ಹೆಚ್ಚಾಗುತ್ತಿದೆ. ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ತಾಂಡವವಾಡುತ್ತಿದೆ. ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಅವರೇ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಸಿಎಂ ಬೊಮ್ಮಾಯಿ ಅವರನ್ನು ಕೆಳಗಿಳಿಸಿ ಮುರುಗೇಶ್ ನಿರಾಣಿಯನ್ನು ಸಿಎಂ ಮಾಡಲು ಈಶ್ವರಪ್ಪ ಪ್ರಯತ್ನಿಸುತ್ತಿದ್ದಾರೆ. ಯಡಿಯೂರಪ್ಪ ಅವರ ಕಣ್ಣಲ್ಲಿ ನೀರು ಹಾಕಿಸಿದ್ದು ಈಶ್ವರಪ್ಪ ಎಂದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್