Headlines

ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ

 ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.

ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು.

ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈಗಾಗಲೇ ಈಡಿಗ ಕೋಟಾದಡಿ ಇಬ್ಬರು ಸಚಿವರು ಇದ್ದಾರೆ. ಅವರು ಘಟ್ಟದ ಕೆಳಗಿನವರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಇನ್ನೊಂದು ಸಚಿವ ಸ್ಥಾನ ಕೊಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಇದು ಚುನಾವಣೆ ವರ್ಷವಾಗಿದ್ದು, ವರಿಷ್ಠರು ಅವಕಾಶ ನೀಡಿದರೆ ಸಮರ್ಥವಾಗಿ ಸಚಿವ ಸ್ಥಾನ ನಿಭಾಯಿಸುತ್ತೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಶಿವಮೊಗ್ಗ ಪ್ರವಾಸದಲ್ಲಿದ್ದು ಈ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಪ್ರಮುಖವಾಗಿ ಸಾಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಬಗರ್‌ಹುಕುಂ, ಅರಣ್ಯ ಹಕ್ಕು, ಕರೂರು ಭಾರಂಗಿ ಹೋಬಳಿಯ ನೆಟ್‌ವರ್ಕ್, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗ್ಗೆ ಗಮನ ಸೆಳೆಯಲಾಗುತ್ತದೆ. ಸಾಗರ ನಗರಸಭೆಗೆ ವಿಶೇಷ ಅನುದಾನ ತರುವ ನಿಟ್ಟಿನಲ್ಲಿ ಸಹ ಮನವಿ ನೀಡಲಾಗುತ್ತಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *