ಕೆಲ ತಿಂಗಳ ಹಿಂದೆ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ತೀರಾ ಕಳಪೆಯಾಗಿದ್ದು ಒಂದೇ ಮಳೆಗೆ ಜಲ್ಲಿ ಕಿತ್ತು ಬರುತ್ತಿದೆ ಎಂದು ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ-ಕೊಳವಂಕ ಗ್ರಾಮಸ್ಥರು ಆರೋಪಿಸಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ಥರೆ ಹೆಚ್ಚಿರುವ ಕೊಳವಂಕ- ಬಸವಾಪುರ ಸಂಪರ್ಕ ರಸ್ತೆ ನಿರ್ಮಿಸುವಂತೆ ಸುಮಾರು 30 ವರ್ಷಗಳಿಂದ ಹೋರಾಟ ನಡೆಸಿ ಕೊನೆಗೂ ಕೊಳವಂಕ – ಬಸವಾಪುರ ಸಂಪರ್ಕ ರಸ್ತೆ ನಿರ್ಮಾಣಕ್ಕೆ ವರ್ಷಗಳ ಹಿಂದೆ 50 ಲಕ್ಷಕ್ಕೂ ಹೆಚ್ಚು ಹಣ ಮಂಜೂರಾಗಿತ್ತು.
ಮಿತಿಮೀರಿದ ಭ್ರಷ್ಟಾಚಾರವೋ ಅಥವಾ ಈ ಕುಗ್ರಾಮದ ಜನರ ದುರಾದೃಷ್ಟವೋ 50 ಲಕ್ಷಕ್ಕೂ ಹೆಚ್ಚು ಅನುದಾನದಲ್ಲಿ 250 ಮೀ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಿದ್ದು ಅದು ತೀರಾ ಕಳಪೆಯಿಂದ ಕೂಡಿದ್ದು ಮೊದಲ ಮಳೆಗೆ ಕಾಂಕ್ರೀಟ್ ರಸ್ತೆ ಮೇಲಿನ ಜಲ್ಲಿಗಳು ಕಿತ್ತು ಬಂದು ಚರಂಡಿ ಪಾಲಾಗುತ್ತಿದೆ.
ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷರಾದ ರಘುಪತಿ 50 ಲಕ್ಷಕ್ಕೂ ಹೆಚ್ಚು ಮೊತ್ತದ ಈ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ,ಕಳಪೆ ಕಾಮಗಾರಿ ಜಗಜ್ಜಾಹೀರು ಆಗುತ್ತದೆ ಎನ್ನುವ ಕಾರಣಕ್ಕೆ ಈ ಮಾರ್ಗದಲ್ಲಿ ಶಾಸಕರಿಗೆ ಸಂಚರಿಸಲು ಸಹ ಅವರ ಹಿಂಬಾಲಕರು ಬಿಟ್ಟಿಲ್ಲ.ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಕೂಡಾ ಕಷ್ಟಕರವಾಗಿದ್ದು ಅನೇಕ ಬೈಕ್ ಸವಾರರು ಬಿದ್ದು ಗಾಯಗೊಡಿದ್ದಾರೆ.ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯ ಎಂದರು.
ಅರಸಾಳು ಗ್ರಾಪಂ ಸದಸ್ಯರಾದ ಯೋಗೆಂದ್ರ ನಾಯ್ಕ್ ಮಾತನಾಡಿ ನಾಡಿಗೆ ವಿದ್ಯುತ್ ನೀಡಲು ಸರ್ವಸ್ವವನ್ನೂ ತ್ಯಾಗ ಮಾಡಿ ಇಲ್ಲಿ ಬಂದು ನೆಲೆ ನಿಂತಿರುವ ಮುಳುಗಡೆ ಸಂತ್ರಸ್ಥರ ಬಹುದಿನಗಳ ಬೇಡಿಕೆಯಾದ ಕೊಳವಂಕ-ಬಸವಾಪುರ ರಸ್ತೆಗೆ ಅನುದಾನ ಮಂಜೂರಾದರು ಗುತ್ತಿಗೆದಾರರ ಕಳಪೆ ಕಾಮಗಾರಿಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು,ಓಡಾಡಲು ಕಷ್ಟಕರವಾಗಿದೆ.ಕೂಡಲೇ ಈ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನ್ಯಾಯ ದೊರಕಿಸಿಕೊಡಬೇಕಾಗಿದೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಗ್ರಾಮಸ್ಥರಾದ ನಾಗರಾಜ್ ಬಸವಾಪುರ ಮಾತನಾಡಿ ಸುದೀರ್ಘ ಹೋರಾಟಗಳ ನಂತರ ನಮ್ಮ ಗ್ರಾಮಕ್ಕೆ ಬಂದ ರಸ್ತೆ ಕಳಪೆಯಾಗಿ ನಿರ್ಮಿಸಿರುವುದು ತುಂಬಾ ನೋವುಂಟು ಮಾಡಿದೆ.ರಸ್ತೆಯ ಮೇಲೆ ಕಸ ಗುಡಿಸಿದರೆ ಜಲ್ಲಿ ಕಿತ್ತು ಬರುತಿದ್ದು ಕೂಡಲೇ ಸಂಬಂಧಪಟ್ಟವರು ಗಮನಹರಿಸಿ ನಮಗೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಂಡರು.
ಈ ಸಂಧರ್ಭದಲ್ಲಿ ಗ್ರಾಮಸ್ಥರಾದ ನಾರಾಯಣಸ್ವಾಮಿ,ನಾಗರಾಜ್ ಹಾಗೂ ಇನ್ನಿತರರಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್