Headlines

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ.

ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ ಸೂಚನೆಗಳನ್ನು ನೀಡಿದರು.

ಶನಿವಾರ, ಭಾನುವಾರ ರಜೆ ಎಂದು ತಿಳಿಯದೆ, ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕ್ಷೇತ್ರದಲ್ಲಿ ಸತತವಾಗಿ ಓಡಾಡುತ್ತಾ ಮಳೆಯಿಂದ ಯಾವುದೇ ರೀತಿಯಲ್ಲಿ ಆಗಬಹುದಾದ ಹಾನಿ ಎದುರಿಸಲು ಕ್ರಮ ವಹಿಸಬೇಕು. ಇನ್ನೂ ಎರಡು ದಿನ ಹೆಚ್ಚು ಮಳೆಯಾಗುವ ಸಂಭವ ಇದೆ. ಆದ್ದರಿಂದ ಅಧಿಕಾರಿಗಳು ಟೀಮ್ ವರ್ಕ್ ಆಗಿ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಹೊಸನಗರ ತಾಲೂಕ್ ಕಂಟ್ರೋಲ್ ರೂಮ್ ಪ್ರಾರಂಭ :


ಹೊಸನಗರ: ತಾಲ್ಲೂಕಿನಲ್ಲಿ ಕಳೆದ ಐದು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು ಹಗಲು – ರಾತ್ರಿ ಎನ್ನದೆ ಸುರಿಯುತ್ತಿದೆ ಈ ಹಿನ್ನಲೆಯಲ್ಲಿ ಶಾಸಕ ಹರತಾಳು ಹಾಲಪ್ಪ ರವರು ಹೊಸನಗರ ತಾ.ಪಂ ಸಭಾಂಗಣದಲ್ಲಿ, ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನೆಡೆಸಿ,ಎಲ್ಲಾ ಹಂತದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನಗಳಲ್ಲಿದ್ದು. ಮಳೆಹಾನಿ ನಿರ್ವಹಣೆ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಂಡು, ಮಳೆಹಾನಿಯ ವರದಿಯನ್ನು ಮೇಲಾಧಿಕಾರಿಗಳ ಮೂಲಕ ಶಾಸಕರ ಕಛೇರಿಗೆ ನೀಡುವಂತೆ ಸೂಚಿಸಿದರು.

ಗುರುವಾರದಿಂದ ಶುಕ್ರವಾರ ಬೆಳಿಗ್ಗೆಯವರೆಗೆ ಬುಧವಾರಕ್ಕಿಂತ ಮಳೆಯ ಪ್ರಮಾಣ ಕಡಿಮೆ ಇದ್ದು ಇಂದು ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಹೊಸನಗರದಲ್ಲಿ 147.4 ಮಿಲಿ ಮೀಟರ್ ಮಳೆಯಾಗಿದೆ.

ಹೊಸನಗರ ತಾಲ್ಲೂಕಿನಲ್ಲಿ ಅತೀ ಮಳೆಯಿಂದಾಗಿ ಗ್ರಾಮಗಳಲ್ಲಿ ಅನಾಹುತವಾಗಿದ್ದಲ್ಲಿ ತಕ್ಷಣ ಹೊಸನಗರದ ತಾಲ್ಲೂಕು ಕಛೇರಿಯಲ್ಲಿ ಸಾರ್ವಜನಿಕರಿಗಾಗಿ ಕಂಟ್ರೋಲ್ ರೂಮ್ ತೆರೆಯಲಾಗಿದ್ದು ಮೊಬೈಲ್‌ ನಂಬರ್ 9481486849 ಕ್ಕೆ ಕರೆ ಮಾಡಬೇಕೆಂದು ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ಪ್ರತಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *