‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’ ಎಂದು ಹೇಳಿದರು.
‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ ಭಾರತ್ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿರುವುದು ನಿಜಕ್ಕೂ ಸಂತೋಷ ಎಂದ ಅವರು,ಈ ದೇಶಕ್ಕಾಗಿ ಬಲಿದಾನ ಮಾಡಿದವರಿಗೆ ಕಾಂಗ್ರೆಸ್ ಮೇಲೆ ಸಿಟ್ಟಿದೆ. ಕಾಂಗ್ರೆಸ್ ಪಕ್ಷ ನಾಶ ಆಗಬೇಕು ಎಂದು ಅವರು ಶಾಪ ಹಾಕಿದ್ದಾರೆ. ಅವರ ಶಾಪದಂತೆ ನಾಶವೂ ಆಗುತ್ತಿದೆ. ಆದರೂ ಅಲ್ಲೊಂದು ಚೂರು ಇಲ್ಲೊಂದು ಚೂರು ಎಂಬಂತೆ ಉಳಿದಿರುವ ಕಾಂಗ್ರೆಸ್ ಭಾರತವನ್ನು ಮತ್ತೆ ಜೋಡಿಸಲು ಹೊರಟಿದ್ದು ಒಳ್ಳೆಯದೇ’ ಎಂದರು.
‘ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಹೆಸರಿನಲ್ಲಿ ಅಖಂಡ ಭಾರತ ನಿರ್ಮಾಣಕ್ಕೆ ಹೊರಟಿದ್ದೇವೆ ಎಂದು ಅವರು ಹೇಳಬೇಕು. ಪಾಕಿಸ್ತಾನವನ್ನು ವಾಪಸ್ ತರುತ್ತೇವೆ, ಬಾಂಗ್ಲಾದೇಶವನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ರಾಹುಲ್ ತಿಳಿಸಬೇಕು. ಆಗ ಮಾತ್ರ ಇದು ನಿಜವಾದ ಭಾರತ್ ಜೋಡೋ ಯಾತ್ರೆಯಾಗುತ್ತದೆ’ ಎಂದರು.
‘ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಾ? ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಿಯಾಂಕ ಗಾಂಧಿ, ರಾಬರ್ಟ್ ವಾದ್ರಾ ಅವರದ್ದೆಲ್ಲ ಫೋಟೊ ಹಾಕಿಕೊಂಡಿದ್ದಾರೆ. ಪಾಪ ಅವರೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರ ಎಂದು ಪ್ರಶ್ನಿಸಿದ ಈಶ್ವರಪ್ಪ, ರಾಬರ್ಟ್ ವಾದ್ರಾ ಅಂತೂ ದೇಶಕ್ಕಾಗಿ ಎಷ್ಟು ಬಲಿದಾನ ಮಾಡಿದ್ದಾನೆ ಎಂದು ದೇಶಕ್ಕೆ ಗೊತ್ತಾಗಿದೆ. ಆ ಕುಟುಂಬದ ಬಗ್ಗೆ ಮಾತನಾಡಿ ಸಾಕಾಗಿದೆ ‘ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್