ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು.
ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ ಅಂದು ಸುಮಾರು 6 ಸಾವಿರ ಎಕರೆ ಅರಣ್ಯ ಭೂಮಿಯನ್ನು ಮಂಜೂರು ಮಾಡಲಾಗಿತ್ತು. ಆದರೆ ಹೈಕೋರ್ಟ್ 1980ರ ಅರಣ್ಯ ಕಾಯ್ದೆಯಂತೆ ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೇ ಜಮೀನು ನೋಟಿಫಿಕೇಶನ್ ಮಾಡಿರುವುದು ಸರಿಯಲ್ಲ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿತ್ತು.
ಹೈಕೋರ್ಟ್ ರದ್ದುಗೊಳಿಸಿರುವ ಎಲ್ಲ 57 ಅಧಿಸೂಚನೆಗಳನ್ನು ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ಊರ್ಜಿತಗೊಳಿಸಬಹುದಾಗಿದೆ. ಈ ಹಿನ್ನೆಲೆ ಕೇಂದ್ರಕ್ಕೆ ನಿಯೋಗ ಕರೆದೊಯ್ದು ಅನುಷ್ಠಾನಗೊಳಿಸುವಂತೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿಗಳು, ಸಾಂಖ್ಯಿಕ ಮತ್ತು ಯೋಜನಾ ಅಧಿಕಾರಿಗಳ ಸ್ಪಷ್ಟ ಮಾಹಿತಿಯನ್ನು ಕಲೆ ಹಾಕಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ನೋಟಿಫಿಕೇಶನ್ ಮಾಡಿರುವ ಆರು ಸಾವಿರ ಎಕರೆ ಜಮೀನಿಗೆ ಇನ್ನೂ ಮೂರು ಸಾವಿರ ಎಕರೆ ಅರಣ್ಯ ಭೂಮಿಯನ್ನು ಸೇರ್ಪಡೆಗೊಳಿಸುವಂತೆ ವರದಿಯಲ್ಲಿ ಪ್ರಸ್ತಾಪಿಸುವಂತೆ ಚರ್ಚಿಸಲಾಯಿತು ಎಂದು ಹೇಳಿದರು.
ಸಭೆಯಲ್ಲಿ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಇಲಾಖೆಯ ಡಿಸಿಎಫ್ ಸಂಜಯ್ ಬಿಜ್ನೂರ್, ಶರಾವತಿ ಮುಳುಗಡೆ ಪ್ರದೇಶದ ರೈತರಾದ ಕಾಳನಾಯ್ಕ,ಬೆಳ್ಳೂರು ತಿಮ್ಮಪ್ಪ , ಕೃಷ್ಣಮೂರ್ತಿ, ಸೇರಿದಂತೆ ರೈತ ಮುಖಂಡರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್