ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು.
ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ ಸಮಾಜದ ಮುಖಂಡರೊಂದಿಗೆ ಭೇಟಿ ಮಾಡಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಹಿರಿಯರ ಜೊತೆಗೆ ತಾವು ಸಹ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ರಚನೆಯಾದ ಬಳಿಕ ಮೊದಲ ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್. ಕುಮಾರ್ ಬಂಗಾರಪ್ಪ ಸೇರಿದಂತೆ ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಿಗಮದಿಂದ ದೊರೆಯುವ ಸೌಲಭ್ಯಗಳನ್ನು ಸಮಾಜಕ್ಕೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಪ್ರಸ್ತುತ ನಿಗಮದಲ್ಲಿ 15 ಕೋಟಿ ರೂ., ಅನುದಾನವಿದ್ದು, ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿ ಮತ್ತು ಸಂಬಂಧಿಸಿದ ಸಚಿವರನ್ನು ಕೋರಲಾಗುವುದು. ಜೊತೆಗೆ, ಮಡಿವಾಳ ಸಮಾಜ ಮಾತ್ರವಲ್ಲದೇ ತಾಲೂಕಿನ ಅಭಿವೃದ್ಧಿ ಹಾಗೂ ಇತರೆ ಸಮುದಾಯಗಳ ಅಭಿವೃದ್ಧಿಗೆ ಆಯಾ ಸಮುದಾಯದ ನಿಗಮದ ಅಧ್ಯಕ್ಷರನ್ನು ಭೇಟಿ ಮಾಡಿ ಸವಲತ್ತುಗಳನ್ನು ಕೊಡಿಸಲು ಪ್ರಯತ್ನಿಸುತ್ತೇನೆ. ಈ ಮೂಲಕ ಸರ್ಕಾರ ನೀಡಿದ ಜವಾಬ್ದಾರಿಯನ್ನು ನಿಬಾಯಿಸುವುದಾಗಿ ತಿಳಿಸಿದರು.
ತಾಲೂಕಿನ ಆನವಟ್ಟಿ ಪಟ್ಟಣದಲ್ಲಿ ನ.15 ರಂದು ಬಿಜೆಪಿಯಿಂದ ನಡೆಯಲಿರುವ ಜನ ಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಚಿವರು, ಜಿಲ್ಲೆಯ ಶಾಸಕರು, ಸಂಸದರು ಪಾಲ್ಗೊಳ್ಳಲಿದ್ದು, ಸಮಾವೇಶದ ಯಶಸ್ವಿಗೆ ಸಹಕರಿಸುವ ಜೊತೆಗೆ ಸರ್ಕಾರದ ಭಾಗವಾಗಿ ಪಾಲ್ಗೊಳ್ಳುತ್ತೇನೆ. ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುತ್ತಾ, ಕ್ಷೇತ್ರ ಮಾತ್ರವಲ್ಲದೇ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ತಿಳಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್