ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕ ದಿನೇಶ್ ರವರನ್ನು ದಿಡೀರ್ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಶಾಲೆಯ ಗೇಟ್ ಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ.
ಮಲೆನಾಡ ಗಾಂಧಿ ಎಚ್.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡು ಇತ್ತೀಚಿಗೆ ಈ ಶಾಲೆಗೆ ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಭೇಟಿ ನೀಡಿ ಶಾಲೆಯ ಕಾರ್ಯ ವೈಖರಿಯನ್ನು ಪ್ರಶಂಸಿಸಿದ್ದರು.
ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ ಸಾಗಬಹುದು ಎಂಬುದಕ್ಕೆ ಉತ್ತರವಾಗಿ ನಿಲ್ಲುತಿತ್ತು ಈ ಶಾಲೆ.
ಆದರೆ ಇಂದು ಅದೇ ಶಾಲೆಯ ಮುಂಭಾಗ ಪೋಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಕ ದಿನೇಶ್ ವರ್ಗಾವಣೆ ವಿರೋಧಿಸಿ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸುತಿದ್ದಾರೆ.
ಪ್ರತಿಭಟನಾಕಾರರು ಮಾತನಾಡಿ ಹಳ್ಳಿ ಶಾಲೆಯ ಅಭಿವೃದ್ಧಿ ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿ ಶಕ್ತಿಗಳು ನಮ್ಮೆಲ್ಲರ ನೆಚ್ಚಿನ ಶಿಕ್ಷಕನನ್ನು ವರ್ಗಾವಣೆ ಮಾಡಿದ್ದಾರೆ.ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ವರ್ಗಾವಣೆ ಆದೇಶ ರದ್ದುಪಡಿಸದಿದ್ದಲ್ಲಿ ಶಾಲೆಯ ಮುಂಭಾಗದಲ್ಲೇ ಅಹೋರಾತ್ರಿ ಧರಣಿ ಕೂರುತ್ತೇವೆ ಇಲ್ಲದಿದ್ದಲ್ಲಿ ಶಾಲೆಯಿಂದ ಸಾಮೂಹಿಕ ಟಿಸಿ ಪಡೆಯುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ ವಿದ್ಯಾರ್ಥಿಗಳಂತೂ ನಮ್ಮ ದಿನೇಶ್ ಸರ್ ರನ್ನು ನಾವು ಎಲ್ಲಿಗೂ ಕಳುಹಿಸುವುದಿಲ್ಲ ಎಂದು ತಮ್ಮ ಅಳಲು ವ್ಯಕ್ತಪಡಿಸುತಿದ್ದಾರೆ.
ಪ್ರತಿಭಟನೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪದ್ಮರಾಜ್. ಉಪಾಧ್ಯಕ್ಷೆರಾದ ಕುಸುಮ ಸುರೇಶ್,ರಾಘವೇಂದ್ರ ಸದಸ್ಯರಾದ ರಾಜೇಶ್ ಬಿ ಎಲ್.ನಾಗೇಶಪ್ಪ ಕೆರೆಮನೆ. ಅಮೃತ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಂಡಿ ಲಿಂಗ ರಾಜ್. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಗ್ರಾಮಸ್ಥರಾದ ಬಿ. ಪಿ. ಮಹೇಶ್. ರಮೇಶ್, ಸೇರಿದಂತೆ ನೂರಾರು ಗ್ರಾಮಸ್ಥರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್