ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಹೆಚ್ಚುತಿದ್ದು ಎಲ್ಲಾ ಪಕ್ಷಗಳು 224 ಕ್ಷೇತ್ರದಲ್ಲಿ ಗೆಲ್ಲುವಂತಹ ಅಭ್ಯರ್ಥಿಗಳ ಆಯ್ಕೆ ಮಾಡಿ ರಾಜ್ಯದ ಗದ್ದುಗೆ ಏರುವ ಉತ್ಸಾಹದಲ್ಲಿದೆ.
ಇಂದು ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ 300 ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ಬೆಂಗಳೂರಿಗೆ ದೌಡಾಯಿಸಿದ್ದು ಸಿದ್ದರಾಮಯ್ಯ ,ಪರಮೇಶ್ವರ್ ಮತ್ತು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರವರನ್ನು ಭೇಟಿಯಾಗಿ ಬೇಳೂರು ಗೋಪಾಲಕೃಷ್ಣ ರವರಿಗೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ನೀಡಲು ಒತ್ತಾಯಿಸಿದ್ದಾರೆ.
ಇದಕ್ಕೆ ಸ್ಪಂದಿಸಿರುವ ಕೈ ನಾಯಕರು ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆ ಆಧಾರದಲ್ಲಿ ಬೇಳೂರಿಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಇಂದು ರಾತ್ರಿ ಡಿ ಕೆ ಶಿವಕುಮಾರ್ ಸಾಗರ ಕ್ಷೇತ್ರದಿಂದ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಭೇಟಿ ಮಾಡಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿ ಟಿಕೆಟ್ ಕೊಡುವ ಜವಬ್ದಾರಿ ನಮಗೆ ಬಿಡಿ ಎಂದು ಸ್ಪಷ್ಟವಾಗಿ ಹೇಳಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.
ಬೇಳೂರಿಗೆ ಟಿಕೆಟ್ ತಪ್ಪಿಸಲು ರಣತಂತ್ರ ಹೆಣೆಯುತ್ತಿರುವ ಮುಖಂಡರು
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಹಾಲಿ ಶಾಸಕ ಹರತಾಳು ಹಾಲಪ್ಪ ರವರ ಹೆಸರು ಫೈನಲ್ ಆಗಿದ್ದು ಘೋಷಣೆಯೊಂದೇ ಬಾಕಿ ಎನ್ನಲಾಗುತ್ತಿದೆ.ಕಾಂಗ್ರೆಸ್ ಪಕ್ಷದಿಂದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೆಸರು ಸಂಭವನೀಯ ಪಟ್ಟಿಯಲ್ಲಿದ್ದು ಅವರೇ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.
ಆದರೆ ಕಾಂಗ್ರೆಸ್ ಪಕ್ಷದ ಕೆಲ ಹಿರಿಯ ಮುಖಂಡರು ಬೇಳೂರು ಗೋಪಾಲಕೃಷ್ಣ ರವರಿಗೆ ಟಿಕೆಟ್ ತಪ್ಪಿಸಲೇ ಬೇಕೆಂಬ ಜಿದ್ದಿಗೆ ಬಿದ್ದಂತೆ ಒಂದು ಸಭೆ ಕೂಡ ನಡೆಸಿದ್ದಾರೆನ್ನಲಾಗುತಿದ್ದು ಕ್ಷೇತ್ರದ ಜಿಪಂ ಮಾಜಿ ಅಧ್ಯಕ್ಷರು, ಜಿಪಂ ಮಾಜಿ ಸದಸ್ಯರು,ಹಾಗೂ ಮುಖಂಡರು ಸಭೆ ನಡೆಸಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುತ್ಸದಿ ನಾಯಕರ ಮುಂದೆ ಅಹವಾಲು ಸಲ್ಲಿಸಿ ಅವರಿಂದ ರಾಜ್ಯಾಧ್ಯಕ್ಷರಿಗೆ ಕರೆಮಾಡಿಸಿ ಟಿಕೆಟ್ ಘೋಷಣೆ ತಡೆ ಹಿಡಿಯುವಂತೆ ಹೇಳಿಸಿದ್ದಾರೆ ಎನ್ನಲಾಗುತಿದ್ದು ಇನ್ನೂ ಮುಂದುವರಿದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕಡೆಯಿಂದ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷದಿಂದ ಪಕ್ಷ ಸಂಘಟನೆಯ ಬಗ್ಗೆ ಕಿಂಚಿತ್ತು ತಲೆಕೆಡಿಸಿಕೊಳ್ಳದ ನಾಯಕರು ಚುನಾವಣಾ ಸಂಧರ್ಭದಲ್ಲಿ ಪಕ್ಷದ ನಾಯಕರ ಸೋಗಿನಲ್ಲಿ ಬಂದು ವಿರೋಧ ಪಕ್ಷಕ್ಕೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಾರೆ ಎಂದು ಕಾರ್ಯಕರ್ತರು ಸಿದ್ದರಾಮಯ್ಯ ಮತ್ತು ಡಿಕೆಶಿ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್