ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು.
ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ್ಯಕರ್ತರ ಮೇಲೆ ಅವಲಂಬಿತವಾಗಿದೆ. ಹೇಗೆ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಒಂದು ದಿನವೂ ವಿಶ್ರಾಂತಿ ತೆಗೆದುಕೊಳ್ಳದೇ, ದೇಶಕ್ಕಾಗಿ ಶ್ರಮಿಸುತ್ತಿರುವರೋ ಅದೇ ರೀತಿಯಲ್ಲಿ ಅವರ ಹೆಸರನ್ನು ಹೆಮ್ಮೆಯಿಂದ ಹೇಳುವ ಕಾರ್ಯಕರ್ತರು ಸಹಾ ಚುನಾವಣೆಯಲ್ಲಿ ದಣಿವರಿಯದೇ ಕೆಲಸ ಮಾಡಿದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬಿಜೆಪಿ ಮಹಿಳೆಯರಿಗೆ ವಿಶೇಷ ಪ್ರಾಧಾನ್ಯತೆ ನೀಡಿದೆ. ದೇಶದ ರಾಷ್ಟ್ರಪತಿ, ಹಣಕಾಸು ಸಚಿವ ಸ್ಥಾನ ಸಹಾ ಮಹಿಳೆಯ ಕೈಯಲ್ಲಿರುವುದು ಇದಕ್ಕೆ ಸಾಕ್ಷಿ. ಒಂದು ಕಾಲದಲ್ಲಿ ಹಣ, ಹೆಂಡ, ತೋಳ್ಬಲ, ಜಾತಿಯನ್ನು ಮುಂದಿಟ್ಟು ಚುನಾವಣೆ ಮಾಡಿ ಕೆಲವರು ಗೆಲವು ಸಾಧಿಸುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದೆ. ಅನ್ಯಾಯವನ್ನು ಸಹಿಸಿಕೊಳ್ಳಲು ಯಾರೂ ತಯಾರಿಲ್ಲ. ಯುವ ಜನತೆ ಎಚ್ಚೆತ್ತುಕೊಂಡಿದೆ. ಕಾಂಗ್ರೆಸ್ ಪಕ್ಷದ ನಾಯಕರು ಮುಂದಿನ ನಾಲ್ಕು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿಟ್ಟುಕೊಂಡಿದ್ದಾರೆ ಎಂದು ಈ ಹಿಂದೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರೇ ಹೇಳಿದ್ದರು ಎಂದು ಆರೋಪಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವ ಹಂತ ತಲುಪಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್ ಮುಕ್ತ ಮಾಡುವ ಕಾಲ ಸನ್ನಿಹಿತವಾಗಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ವಿತರಣೆ ಮಾಡುವ ಮೂಲಕ ಜನರಿಗೆ ಪೊಳ್ಳು ಆಶ್ವಾಸನೆ ನೀಡುತ್ತಿದೆ. ಅವರು ನೀಡಿರುವ ಗ್ಯಾರಂಟಿಗಳನ್ನು ಪೂರೈಸಲು ಬೇಕಾಗುವ ಹಣಕಾಸು ರಾಜ್ಯದ ಒಟ್ಟಾರೆ ಬಜೆಟ್ನ ಮೊತ್ತಕ್ಕಿಂತಲೂ ಅಧಿಕವಾಗಿದೆ. ಹಾಗಾಗಿ ಇದು ಜನರನ್ನು ಮೋಸಗೊಳಿಸುವ ಯತ್ನ ಎಂದು ಟೀಕಿಸಿದರು.
ಶಾಸಕ ಹರತಾಳು ಹಾಲಪ್ಪ ಮಾತನಾಡಿ, ಚುನಾವಣೆ ಒಂದು ಯುದ್ಧವಿದ್ದಂತೆ. ಬಸವರಾಜ ಬೊಮ್ಮಾಯಿ ಅವರು ಅರ್ಜುನನ ಪಾತ್ರ ವಹಿಸಿದ್ದರೆ, ಯಡಿಯೂರಪ್ಪ ಅವರು ಶ್ರೀಕೃಷ್ಣನ ಪಾತ್ರ ವಹಿಸಿದ್ದಾರೆ. ಗೆಲುವು ನಮ್ಮದೇ, ಮುಂದಿನ ಅವಧಿಗೂ ಬಿಜೆಪಿ ಅಧಿಕಾರ ಶತಸ್ಸಿದ್ಧ. ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಮತದಾರರು ಇದನ್ನು ಗಮನಿಸಿ ತಮ್ಮನ್ನು ಮತ್ತೊಮ್ಮೆ ಬೆಂಬಲಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.
ಮಾಜಿ ಶಾಸಕ ಬಿ.ಸ್ವಾಮಿರಾವ್, ಪ್ರಮುಖರಾದ ಡಾ. ರಾಜನಂದಿನಿ ಕಾಗೋಡು, ಕೆ.ಎಸ್.ಪ್ರಶಾಂತ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಗಣಪತಿ ಬಿಳಗೋಡು, ಲೋಕನಾಥ ಬಿಳಿಸಿರಿ, ರಾಘವೇಂದ್ರ ಬಾಳೆಬೈಲು, ಗಣೇಶಪ್ರಸಾದ್, ಉಮೇಶ ಕಂಚುಗಾರ್, ಎಂ.ಎನ್.ಸುಧಾಕರ, ಎನ್.ಆರ್.ದೇವಾನಂದ, ಎ.ವಿ.ಮಲ್ಲಿಕಾರ್ಜುನ, ಮನೋಧರ, ವೀರೇಶ್ ಮತ್ತಿತರರು ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್