ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತಲ್ಲೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ಅಕ್ಷತಾ ರಾತ್ರಿ ತಾಯಿಯ ಜೊತೆ ಮಲಗಿದ್ದ ವೇಳೆ ಕಿರುಚಾಡಿ ಹಾವು ಕಚ್ಚಿತು ಎಂದಿದ್ದಳು. ಮಧ್ಯರಾತ್ರಿ ವಿದ್ಯುತ್ ದೀಪ ಹಾಕಿದ್ದಾಗ ಬೆಳಕಿನಲ್ಲಿ ಹಾವು ಕಾಣಿಸಿರಲಿಲ್ಲ. ನಂತರ ಆಕೆಯ ದೇಹದಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನವಾದರೂ ಹಾವು ಕಚ್ಚಿದ್ದು ಪತ್ತೆ ಹಚ್ಚಿಲ್ಲ:
ಮೊದಲು ಆನವಟ್ಟಿ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆಯಲಾಗಿದೆ. ಆದರೆ, ಅಲ್ಲಿಯೂ ಆರೋಗ್ಯ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಶಿಕಾರಿಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಯುವತಿಗೆ ಹಾವು ಕಚ್ಚಿದೆ ಎಂಬ ವಿಷಯ ತಿಳಿದ ನಂತರ ಆಕೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಹಾವಿನ ವಿಷ ದೇಹಪೂರ್ತಿ ಹರಡಿಕೊಂಡಿತ್ತು. ವೈದ್ಯರು ನಿರಂತರವಾಗಿ ಚಿಕಿತ್ಸೆಯನ್ನೂ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಮಲಗಿದ್ದ ಮಗಳು ಬೆಳಗ್ಗೆ ಏಳುವಷ್ಟರಲ್ಲಿ ಹೆಣವಾಗಿದ್ದಳು ಎಂದು ತಿಳಿದುಬಂದಿದೆ.
ದ್ವಿತೀಯ ಪಿಯುಸಿ ಕಾಲೇಜಿಗೆ ಹೋಗಬೇಕಿತ್ತು:
ಇನ್ನು ಮೃತ ವಿದ್ಯಾರ್ಥಿನಿ ಶಿಕಾರಿಪುರದ ಖಾಸಗಿ ಕಾಲೇಜಿನಲ್ಲಿ ಮೊದಲ ಪಿಯುಸಿ ಪರೀಕ್ಷೆಯನ್ನು ಬರೆದು ಉತ್ತೀರ್ಣಳಾಗಿದ್ದಳು. ಈ 2023-24ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಹೋಗಬೇಕಿತ್ತು. ಆದರೆ, ರಜೆಯ ಹಿನ್ನೆಲೆಯಲ್ಲಿ ಮನೆಯ ಸದ್ಯರೆಲ್ಲರೂ ಒಟ್ಟಿಗೆ ಮಲಗುತ್ತಿದ್ದು, ಹಾವು ಕಚ್ಚಿದ್ದನ್ನು ಕೂಡ ಮನೆ ಸದಸ್ಯರು ನಿರ್ಲಕ್ಷ್ಯ ಮಾಡಿದ್ದಾರೆ. ಹಾವಿನ ಬದಲು ಬೇರೆ ಯಾವುದೋ ಹುಳ ಕಚ್ಚಿರಬೇಕು ಎಂದು ಹೇಳಿ ಸಮಾಧಾನ ಮಾಡಿದ್ದಾರೆ. ಆದರೆ, ಕುಟುಂಬದ ನಿರ್ಲಕ್ಷ್ಯದಿಂದ ಮಗಳನ್ನೇ ಕಳೆದುಕೊಂಡಿದ್ದಾರೆ. ಈ ಘಟನೆ ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್