ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹಲವೆಡೆ ರಸ್ತೆಗಳು ಹದಗೆಟ್ಟಿವೆ. ಮಳೆಗೆ ಬೈಸೆ ಸೇತುವೆಯಿಂದ ಕೆರೆಗದ್ದೆಗೆ ಹೋಗುವ ರಸ್ತೆ ಅಕ್ಷರಶಃ ಕೆಸರುಗದ್ದೆಯಂತಾಗಿದೆ. ರೈತರು, ಶಾಲಾ ಮಕ್ಕಳು, ವೃದ್ಧರು ಸಂಚರಿಸಲು ಕಷ್ಟವಾಗಿದೆ. ಆರೋಗ್ಯ ತುರ್ತು ಸಂದರ್ಭಗಳಲ್ಲಿ ಇಲ್ಲಿನ ಜನರ ಸಂಕಟ ಹೇಳತೀರದು.
ಕೆರೆಗದ್ದೆ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ ಅನುದಾನದ ಮೀಸಲಿಟ್ಟು ಚುನಾವಣೆಗೆ ಮುನ್ನ ಶಂಕುಸ್ಥಾಪನೆ ಮಾಡಲಾಗಿತ್ತು. ರಸ್ತೆ ಮೇಲೆ ಮಣ್ಣು ಹಾಕಿ ಕಾಮಗಾರಿ ಆರಂಭಿಸಲಾಗಿತ್ತು. ಚುನಾವಣೆ ಬಳಿಕ ಸ್ಥಗಿತಗೊಂಡ ರಸ್ತೆ ಕಾಮಗಾರಿ ಎರಡು ತಿಂಗಳು ಕಳೆದರೂ ಮತ್ತೆ ಪ್ರಾರಂಭವಾಗಿಲ್ಲ. ರಸ್ತೆಗೆ ಗ್ರಾವೆಲ್ ಮಣ್ಣು ಹಾಕಬೇಕಿತ್ತು. ಆದರೆ ಹತ್ತಿರದಲ್ಲೇ ಇದ್ದ ಕೆಂಪು ಮಣ್ಣನ್ನು ರಸ್ತೆಗೆ ಹಾಕಲಾಗಿದೆ. ಇದೀಗ ಧಾರಾಕಾರ ಮಳೆಯಿಂದಾಗಿ ರಸ್ತೆ ಹದಗೆಟ್ಟು ಸಂಪೂರ್ಣ ಕೆಸರುಗದ್ದೆಯಾಗಿದೆ. ರಸ್ತೆಯಲ್ಲಿ ಕಾಲು ಹುಗಿಯುತ್ತಿದ್ದು ಓಡಾಡಲು ತೊಂದರೆಯಾಗಿದೆ ಎನ್ನುವುದು ಗ್ರಾಮಸ್ಥರ ದೂರು. ಗ್ರಾಮಸ್ಥರೇ ಸ್ವಂತ ವೆಚ್ಚದಲ್ಲಿ ಅರ್ಧ ಕಿಮೀ ರಸ್ತೆಯ ಮೇಲಿನ ಮಣ್ಣನ್ನು ತೆರವುಗೊಳಿಸುವ ಕಾರ್ಯವನ್ನೂ ಮಾಡಿದ್ದಾರೆ.
ಪ್ರತಿಭಟನೆ ನಡೆಸಿ ಮಾತನಾಡಿದ ಗ್ರಾಮದ ಮಹಿಳೆಯರು, “ಚುನಾವಣೆ ಬಳಿಕ ಜನಪ್ರತಿನಿಧಿಗಳ ಪತ್ತೆ ಇಲ್ಲ. ಗುತ್ತಿಗೆದಾರರ ಸುಳಿವೂ ಇಲ್ಲ. ನೋಡಿ ನೋಡಿ ನಮಗೆ ಸಾಕಾಗಿ ಹೋಗಿದೆ. ಹಾಗಾಗಿ ತುರ್ತಾಗಿ ರಸ್ತೆಗೆ ಜಲ್ಲಿ ಹಾಕಿ ಗ್ರಾಮಸ್ಥರಿಗೆ ಸಂಚರಿಸಲು ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಗ್ರಾಮ ಪಂಚಾಯತ್ ಮುಂದೆ ಸತ್ಯಾಗ್ರಹ ನಡೆಸುತ್ತೇವೆ. ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರ ಮನೆ ಮುಂದೆ ಧರಣಿ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್