ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು
ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.
ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ ನಾಗರಾಜ ಅವರ ಪರಿಚಯವಾಗಿತ್ತು. ಆ. 12 ರಂದು ಅವರು ನನ್ನೊಂದಿಗೆ ಮಾತನಾಡುತ್ತಾ, ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗುವುದಿಲ್ಲ ಎಂದು ನನ್ನ ಜತೆ ಚಾಲೆಂಜ್ ಮಾಡಿದ್ದಾರೆ. ಹೀಗೆ ಚಾಲೆಂಜ್ ಮಾಡಿದ ವಿಡಿಯೋವನ್ನು ನಾವಿಬ್ಬರು ಪರಸ್ಪರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇವೆ. ಕುಡುಪಲಿ ಅವರು ತಮ್ಮ ಫೇಸ್ಬುಕ್ ಖಾತೆ ಸುದ್ದಿ ಚಾವಡಿಗೆ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಆ 14ರಂದು ಪುನಃ ಅವರು ಇನ್ನೊಂದು ವಿಡಿಯೋ ಮಾಡಿ ಅದನ್ನು ತಮ್ಮ ಸುದ್ದಿ ಚಾವಡಿ ಖಾತೆಗೆ ಅಪ್ಲೋಡ್ ಮಾಡಿದ್ದಾರೆ.
ಆ ವಿಡಿಯೋದಲ್ಲಿ ”ಬಿಜೆಪಿ ಮುಕ್ತ ಕರ್ನಾಟಕವಾಗಬೇಕು. ಮೋದಿಯೇನು ದೇವರೇನ್ರಿ, ಹಿ ವಾಸ್ ಒನ್ ಆಫ್ ದಿ ಟೆವೆಂಡರ್, ಹುದ್ದೆ ಬಿಟ್ಟರೆ ಯಾರವರು, ಹೂ ಈಸ್ ಹಿ, ಸ್ವತಂತ್ರವಾಗಿ ವಿಮಾನದಲ್ಲಿ ಅಡ್ಡಾಡುವ ಶಕ್ತಿ ಅವನಿಗೆ ಇಲ್ಲ, ನಾನು ದುಡಿದ ಹಣದಲ್ಲಿ ವಿಮಾನದ ಟಿಕೆಟ್ ತೆಗೆದುಕೊಂಡು ಓಡಾಡುತ್ತೇನೆ. ಅವರದೇನಿದೆ ದುಡಿಮೆ ಎಂದು ಹೇಳಿರುವ ಜತೆಗೆ, ಇವತ್ತು ಒಬ್ಬ ಪ್ರವೀಣ ಎಂಬ ಕೋಮುವಾದಿ ನನ್ನನ್ನು ಭೇಟಿಯಾಗಿದ್ದು ಫೇಸ್ಬುಕ್ ಮತ್ತು ಫೋನ್ನಲ್ಲಿರುವ ದುಷ್ಟಬುದ್ಧಿ ಇರುವವನು ಎಂದು ಅವಹೇಳನಾಕಾರಿಯಾಗಿ ದೇಶದ ಪ್ರಧಾನಮಂತ್ರಿಗಳು ಮತ್ತು ನನ್ನ ಬಗ್ಗೆ ಮಾತನಾಡಿದ್ದಾರೆ.ದೇಶದ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ಮಾತನಾಡಿದ್ದು, ನನ್ನ ವಿರುದ್ದವೂ ಮಾನಹಾನಿಯಾಗುವಂತಹ ಟೀಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಾಜ್ ಕುಡುಪಲಿ ಎಂಬುವವರನ್ನು ಕರೆಸಿ ವಿಚಾರಣೆ ನಡೆಸುವ ಜೊತೆಗೆ ಸೂಕ್ತ ಕಾನೂನುಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಕೆ.ವಿ.ಪ್ರವೀಣ್ ಒತ್ತಾಯಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್