ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ದ ಏಕಶೀಲೆಯ ಹೆಬ್ಬಂಡೆಯಲ್ಲಿ ವಿರಾಜಮಾನವಾಗಿ ಕಂಗೊಳಿಸುತ್ತಾ ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಪರಿಹರಿಸುವ ಶ್ರೀ ಜೇನುಕಲ್ಲಮ್ಮ ದೇವಿಯ ದರ್ಶನಕ್ಕೆ ಇಂದು 3ನೇ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ.
ಬೆಳಗ್ಗೆ 06 ಗಂಟೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದು 08 ಗಂಟೆ ಹೊತ್ತಿಗೆ ಒಂದು ಕಿ.ಮೀ. ಗೂ ಅಧಿಕ ದೂರದಿಂದ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು.
ಕಿರಿದಾದ ರಸ್ತೆ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸ್ಥಳಾವಕಾಶದ ಕೊರತೆ ಇರುವುದರಿಂದ ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರನ್ನು ನಿಯಂತ್ರಿಸಲು ರಕ್ಷಣಾ ಇಲಾಖೆ, ಸಮಿತಿ ಸದಸ್ಯರು ಹಾಗೂ ಸ್ವಯಂ ಸೇವಕರು ಹರಸಾಹಸ ಪಡುತ್ತಿದ್ದು ವಾಹನಗಳು ಸಾಲುಗಟ್ಟಿ ನಿಂತಿವೆ.
ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದ ಭಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ವಾಹನಗಳ ಮೂಲಕ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ತಮ್ಮ ಹೊಲದಲ್ಲಿ ಬೆಳೆದ ಶುಂಠಿ, ಅಡಿಕೆ, ಅಕ್ಕಿ, ಇನ್ನಿತರ ಬೆಳೆಗಳನ್ನು ತಂದು ದೇವಿಗೆ ಅರ್ಪಿಸುತ್ತಾರೆ.
ವಿಶೇಷವೆಂದರೆ ಇಲ್ಲಿನ ದೇವಿಗೆ ಬೆಣ್ಣೆ ಮತ್ತು ಬುತ್ತಿಯ ಬುಟ್ಟಿ ಹೊತ್ತು ತಂದು ದೇವಿಗೆ ನೈವೇದ್ಯ ಮಾಡಿಸಿಕೊಂಡು ಅಲ್ಲಿಯೇ ಬಂಡೆಯ ಮೇಲೆ ಕುಳಿತು ಬರುವ ಭಕ್ತರಿಗೂ ಹಂಚಿ ಊಟ ಮಾಡಿದರೆ ಕುಟುಂಬದ ಶ್ರೇಯೋಭಿವೃದ್ದಿ ಹೊಂದುವುದೆಂಬ ನಂಬಿಕೆ ಇಲ್ಲಿನ ಹಲವು ಭಕ್ತರದಾಗಿದೆ.
ಒಟ್ಟಾರೆಯಾಗಿ ಕಂಕಣ ಧಾರಣೆ ಮಾಡಿದ ಹದಿನೈದು ದಿನಗಳ ಕಾಲ ಕಂಕಣ ಕಟ್ಟಿಸಿಕೊಂಡ ವ್ಯಕ್ತಿ ಮನೆಯನ್ನು ತೊರೆದು ದೇವಿಯ ಸನ್ನಿಧಿಯಲ್ಲಿಯೇ ಇದ್ದು ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ನೆರವೇರಿಸುವುದು ಇಲ್ಲಿನ ಪದ್ದತಿಯಾಗಿದೆ. ಇನ್ನು ಸಿಡಿ ಭೂತಪ್ಪ ಮತ್ತು ಉರಿ ಭೂತಪ್ಪ ಸೇರಿದಂತೆ ಭೈರ ಪರಿವಾರ ದೇವರುಗಳಿಗೆ ಪೂಜೆ ಸಲ್ಲಿಸಿದರೆ ಬೆನ್ನು ನೋವಿನಿಂದ ಬಳಲುವವರು ಸಿಡಿ ಭೂತಪ್ಪನಿಗೆ ಶ್ರದ್ದಾಭಕ್ತಿಯಿಂದ ಪೂಜೆ ಸಲ್ಲಿಸಿ ಹರಕೆ ಮಾಡಿಕೊಂಡರೆ ಬೆನ್ನು ನೋವು ಮನೆಗೆ ಹೋಗುವುದರೊಳಗೆ ಮಾಯವಾಗುವುದೆಂಬ ಪವಾಡವೇ ಇಲ್ಲಿನ ವಿಶೇಷವಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್