ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಸಜ್ಜು: ಶಾಸಕ ಬೇಳೂರು ಗೋಪಾಲಕೃಷ್ಣ ಕರೆ
ಸಾಗರ : ರಾಜ್ಯದಲ್ಲಿ ಈಡಿಗ ಸಮಾಜದ ಶಕ್ತಿ ಪ್ರದರ್ಶನಕ್ಕೆ ಎಲ್ಲರೂ ಸಜ್ಜಾಗಬೇಕು. ಕನಿಷ್ಠ 20 ಲಕ್ಷ ಈಡಿಗ ಸಮುದಾಯದವರನ್ನು ಒಳಗೊಂಡ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಸರ್ಕಾರಕ್ಕೆ ನಮ್ಮ ಹಕ್ಕುಗಳನ್ನು ಈಡೇರಿಸುವಂತೆ ಒತ್ತಾಯಿಸುವತ್ತ ನಾವು ಗಮನ ಹರಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದ್ದಾರೆ.
ಇಲ್ಲಿನ ಈಡಿಗರ ಸಮುದಾಯ ಭವನದಲ್ಲಿ ಭಾನುವಾರ ಆರ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ, ಇತರೆ ಸಮುದಾಯಗಳಲ್ಲಿ ಗುರುಪೀಠ ಗಟ್ಟಿಯಾಗಿದೆ. ಆಯಾ ಸಮುದಾಯದ ಗುರುಗಳು ಹೇಳಿಕೆ ನೀಡಿದರೆ ಸರ್ಕಾರ ಬೇಡಿಕೆ ಈಡೇರಿಸುತ್ತದೆ.
ದುರದೃಷ್ಟವಶಾತ್ ನಮ್ಮ ಸಮುದಾಯದ ಗುರುಗಳಲ್ಲಿ ಒಮ್ಮತವಿದ್ದಂತೆ ಕಾಣುತ್ತಿಲ್ಲ. ಆದ್ದರಿಂದ ನಮ್ಮ ಹಕ್ಕುಗಳನ್ನು ದಕ್ಕಿಸಿಕೊಳ್ಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗುರುಪೀಠವನ್ನು ಗಟ್ಟಿಗೊಳಿಸುವ ಜೊತೆಜೊತೆಗೆ ಬೃಹತ್ ಸಮಾವೇಶವನ್ನು ಬೆಂಗಳೂರಿನಲ್ಲಿ ಏರ್ಪಡಿಸುವತ್ತ ಸಹ ನಾವು ಗಮನ ಹರಿಸಬೇಕು ಎಂದು ಹೇಳಿದರು.
ಪ್ರಸ್ತುತ ದಿನಗಳಲ್ಲಿ ಈಡಿಗ ಸಮಾಜದಲ್ಲಿ ಪ್ರತಿಭಾವಂತರ ಸಂಖ್ಯೆ ಹೆಚ್ಚುತ್ತಿದೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಅವರು ಸಮಾಜದ ಮುಖ್ಯವಾಹಿನಿಗೆ ಬರುವಂತೆ ನೋಡಿಕೊಳ್ಳಬೇಕು. ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಮ್ಮ ಸಮುದಾಯದ ಮಕ್ಕಳನ್ನು ಸಜ್ಜುಗೊಳಿಸಬೇಕು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ನನಗೆ ಜನರ ಜೊತೆ ಇರುವ ಸಲಹೆ ನೀಡಿದ್ದರೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿವೃದ್ಧಿಪರವಾಗಿ ಚಿಂತಿಸುವಲ್ಲಿ ಪ್ರೇರಣೆ ನೀಡಿದ್ದಾರೆ. ಇವರಿಬ್ಬರ ಮಾರ್ಗದರ್ಶನದಲ್ಲಿ ನಮ್ಮ ಸಮುದಾಯದ ಜೊತೆ ಇತರ ಎಲ್ಲ ಸಮುದಾಯದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಮಾಜದ ಯುವಶಕ್ತಿ ಜಾಗೃತಗೊಳ್ಳಬೇಕು. ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮುದಾಯದ ಅಭಿವೃದ್ಧಿ ಜೊತೆಗೆ ಎಲ್ಲ ಸಮುದಾಯದ ಜೊತೆ ಸಾಮರಸ್ಯದ ಬದುಕು ಕಟ್ಟಿಕೊಳ್ಳುವ ಸಂಕಲ್ಪ ಕೈಗೊಳ್ಳಬೇಕು. ನಾನು ಶಾಸನಕಾಗಿದ್ದಾಗ, ಸಚಿವನಾಗಿದ್ದಾಗ ಜಾತೀಯತೆ ಮಾಡಿಲ್ಲ. ಎಲ್ಲ ಸಮುದಾಯದವರಿಗೂ ಗೇಣಿಹಕ್ಕಿನ ಜೊತೆಗೆ ಭೂಮಿಹಕ್ಕು ಕೊಡಲು ಪ್ರಾಮಾಣಿಕವಾಗಿ ಪ್ರಯತ್ನ ನಡೆಸಿದ್ದೇನೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಸಂತೋಷಕುಮಾರ್ ಎನ್. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐಎಫ್ಎಸ್ ಅಧಿಕಾರಿ ದಾಮೋದರ ನಾಯ್ಕ್, ಪ್ರಮುಖರಾದ ಸುಜಾತ ಕೆ.ಆರ್., ಚಂದ್ರಶೇಖರ ನಾಯ್ಕ್, ಪರಶುರಾಮಪ್ಪ ಈ., ನಾಗಪ್ಪ ಎಚ್.ಕೆ., ಮಂಜಪ್ಪ ಕೆ., ಸುರೇಶ ಸಹನಿ, ಡಾ. ಭರತ್, ಸಂತೋಷಕುಮಾರ್, ಸವಿನಯ್ ಇನ್ನಿತರರು ಉಪಸ್ಥಿತರಿದ್ದರು. ಸತೀಶ್ ನಾಯ್ಕ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. ವೀರಭದ್ರಪ್ಪ ಸೂರಗುಪ್ಪೆ ಸ್ವಾಗತಿಸಿದರು. ಜ್ಯೋತಿ ಎಂ.ಎಚ್. ನಿರೂಪಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್