ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್
ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.
ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ.
ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು.
ಉಡುಪಿಯಿಂದ ಶಿವಮೊಗ್ಗಕ್ಕೆ ಬಸ್ ನಲ್ಲಿ ಬರುತ್ತಿದ್ದಾಗ ಮಾಸ್ತಿಕಟ್ಟೆ ಬಳಿ ತಡರಾತ್ರಿ ಎರಡು ಗಂಟೆಯಲ್ಲಿ ಬಸ್ ತಡೆಗಟ್ಟಿ, ಪೊಲೀಸರು ನೋಟಿಸ್ ನೀಡಿದ್ದಾರೆ. ನಾನೇನು ಶಿವಮೊಗ್ಗದಲ್ಲಿ ಭಯೋತ್ಪಾದಕ ಕೃತ್ಯಗಳ ನಡೆಸಲು ಹೋಗುತ್ತಿರಲಿಲ್ಲ. ಗಲಭೆಯಿಂದ ಭಯಗೊಂಡಿರುವ ಹಿಂದೂ ಸಮಾಜದವರಿಗೆ ಸಾಂತ್ವನ ಹೇಳಿ, ಆತ್ಮವಿಶ್ವಾಸ ತುಂಬಲು ತೆರಳುತ್ತಿದ್ದಾಗಿ ತಿಳಿಸಿದರು.
ಬೆಂಗಳೂರು, ಕೊಯಮತ್ತೂರು ನಲ್ಲಿ ಬಾಂಬ್ ಸ್ಫೋಟದ ಮೂಲಕ ನೂರಾರು ಜನರ ಮಾರಣಹೋಮಕ್ಕೆ ಕಾರಣವಾದ ಮದನಿಗೆ ತಂದೆ- ತಾಯಿ ನೋಡಲು, ಮದುವೆಯಲ್ಲಿ ಭಾಗವಹಿಸಲು ಜಾಮೀನು ಆಧಾರದ ಮೇಲೆ ಅವಕಾಶ ನೀಡಲಾಗುತ್ತದೆ. ಸಾಂತ್ವನ ಹೇಳಲಿಕ್ಕೆ ಮುಂದಾದ ತಮಗೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಗಿ ಗುಡ್ಡದ ಸಂತ್ರಸ್ಥ ಹಿಂದುಗಳಿಗೆ ಸಾಂತ್ವನ ಹೇಳುವುದು ನನ್ನ ಉದ್ದೇಶ. ನಾವು ಯಾವುದೇ ಗಲಾಟೆ, ಧೋಂಬಿ ಮಾಡಲು ಹೋಗಲು ಅಲ್ಲಿಗೆ ತೆರಳುತ್ತಿರಲಿಲ್ಲ. ಸಾಂತ್ವನ ಹೇಳುವ ಸಲುವಾಗಿ ಅಲ್ಲಿಗೆ ಹೋಗುತ್ತಿದ್ದೆ. ಆದರೆ ನನ್ನನ್ನು ತಡೆದು ಪೊಲೀಸರು ದೌರ್ಜನ್ಯ ಮಾಡಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸರ್ಕಾರ ಹಿಂದು ಧರ್ಮದ ವಿರೋಧಿ ಸರ್ಕಾರ, ರಾಗಿ ಗುಡ್ಡದ ಘಟನೆಗೆ ಯಾರು ಕಾರಣ ಎಂದು ತನಿಖೆಯಿಂದ ಹೊರ ಬರಬೇಕಾಗಿದೆ. ಸಿದ್ದರಾಮಯ್ಯ ಕೂಡ ಹಿಂದು ವಿರೋಧಿಗಳ ಕುಮ್ಮಕ್ಕಿನಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ಮುಖಂಡರಿಗೆ ಈಗ ಹಿಂದೂ, ಹಿಂದುತ್ವವೇ ಬೇಕಾಗಿಲ್ಲ. ಹಿಂದೂ ಸಮಾಜದ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೇರೆ ಬೇರೆ ಅಲ್ಲವೇ ಅಲ್ಲ. ಎರಡೂ ಒಂದೇ. ನಮ್ಮ ರಕ್ಷಣೆಗೆ ಸರ್ಕಾರ, ಬಿಜೆಪಿ ಬರುತ್ತದೆ ಎಂದು ಭಾವಿಸದೆ ಹಿಂದುಗಳೇ ತಮ್ಮ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್