ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹಕ್ಕೆ ಗಿರೀಶ್ ಆಚಾರ್ ನಿರ್ಧಾರ
ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿದ್ದಾರೆ.
ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ ಪರವಾನಗಿ ಇಲ್ಲದೇ ಟಿಪ್ಪರ್ಗಳ ಮೂಲಕ ಶಿವಮೊಗ್ಗ ಸೇರಿದಂತೆ ಪಟ್ಟಣ ಪ್ರದೇಶಗಳಿಗೆ ಮರಳು ಸರಬರಾಜು ಆಗುತ್ತಿದ್ದು, ಹೆಚ್ಚಿನ ದರಕ್ಕೆ ಮರಳು ಮಾರಿ ಅಕ್ರಮ ಸಂಪಾದನೆಯಲ್ಲಿ ದಂಧೆಕೋರರು ತೊಡಗಿಕೊಂಡಿದ್ದಾರೆ. ಅಕ್ರಮ ಮರಳುಗಾರಿಕೆಯ ವಿರುದ್ಧ ಹೊಸನಗರದ ಎಲ್ಲಾ ಇಲಾಖೆಗಳಿಗೆ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ದರಣಿ ನಡೆಸಿದರೂ ಏನೂ ಪ್ರಯೋಜನವಾಗಿಲ್ಲ. ಮುಂದಿನ ದಿನದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಸತ್ಯಾಗ್ರಹ ನಡೆಸುವುದರ ಜೊತೆಗೆ ಸರ್ಕಾರದ ಕಣ್ಣು ತೆರೆಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಪ್ರದೇಶ ಮಾತ್ರವಲ್ಲದೇ, ಪಟ್ಟಣಕ್ಕೆ ಸಮೀಪದಲ್ಲಿಯೂ ಮರಳು ದಂಧೆ ನಡೆಯುತ್ತಿದ್ದು, ಅಧಿಕಾರಿ ವರ್ಗ ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಭೂ ಮತ್ತುಗಣಿ ಇಲಾಖೆಯಿಂದ ಯಾವುದೇ ಪರವಾನಗಿ ಇಲ್ಲದಿದ್ದರೂ, ರಾಜಾರೋಷವಾಗಿ ರಾಜಧನ ವಂಚಿಸಿ ಅಕ್ರಮವಾಗಿ ಮರಳು ಸಾಗಾಟ ಮಾಡುವುದಕ್ಕೆ ಬೆಂಗಾವಲಾಗಿ ನಿಂತಿರುವುದು ಯಾರು ಎನ್ನುವುದೇ ಯಕ್ಷ ಪ್ರಶ್ನೆಯಾಗಿದೆ.
ಅಕ್ರಮ ತಡೆಗೆ ರಚಿಸಿರುವ ಟಾಸ್ಕ್ ಫೋರ್ಸ್ ಭಾಗವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತಾಲ್ಲೂಕು ಕಛೇರಿ, ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮಕೈಗೊಂಡರೆ ಅಕ್ರಮ ಮರಳು ದಂಧೆ ತಡೆಯುವುದು ಕಷ್ಟವೇನಲ್ಲ ಎಂದ ಅವರು, ಆದರೆ ಇಲಾಖೆ ಅಧಿಕಾರಿಗಳು ಅಕ್ರಮದ ಬಗ್ಗೆ ಹೆಚ್ಚೇನೂ ತಲೆ ಕೆಡಿಸಿಕೊಳ್ಳದಿರುವುದರ ಹಿಂದಿನ ಕಾರಣವೇನು ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಅಕ್ರಮ ಮರಳು ಸಂಗ್ರಹ, ಸಾಗಾಣಿಕೆಯ ಜಾಲಕ್ಕೆ ಕೆಲ ಪ್ರಭಾವಿ ವ್ಯಕ್ತಿಗಳು ಕೈಜೋಡಿಸಿರುವ ಕಾರಣದಿಂದಲೇ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ. ನಾವು ಯಾವುದೇ ಮನವಿ ಪತ್ರ, ಧರಣಿ ನಡೆಸಿದರೂ ಪ್ರಯೋಜನವಾಗುತ್ತಿಲ್ಲ ಎಂದರು.
ನಾನು ಈಗಾಗಲೇ ಜಿಲಾಧ್ಲಿಕಾರಿ, ಲೋಕಾಯುಕ್ತ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಒತ್ತಾಯಿಸಿ ದೂರು ದಾಖಲಿಸಿದ್ದೇನೆ. ಆದರೆ ಮರಳು ದಂಧೆ ನಿರಾತಂಕವಾಗಿ ಮುಂದುವರೆದಿದೆ. ಸಾಲದ್ದಕ್ಕೆ ರಾಜಕೀಯ ಮೇಲಾಟವೂ ಮರಳು ದಂಧೆಯ ಜೊತೆ ತಳುಕು ಹಾಕಿಕೊಂಡಿದೆ. ವಾಸ್ತವದಲ್ಲಿ ನಡೆಯುತ್ತಿರುವುದೇ ಆಡಳಿತ ರಾಜಕೀಯ ಪಕ್ಷದಿಂದ ಬಹುತೇಕ ಲಾರಿ ಮಾಲಿಕರು ರಾಜಕೀಯ ಪಕ್ಷಗಳ ಕಾರ್ಯಕರ್ತರಾಗಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಎನ್ನುವಂತೆ ನದಿ ಪಾತ್ರದಲ್ಲಿ ಮರಳು ಸಂಗ್ರಹದ ಸ್ಥಳಗಳನ್ನೂ ಅವರವರೇ ಇಂದಿನ ರಾಜಕೀಯ ಪಕ್ಷದ ಕಾರ್ಯಕರ್ತರು ಹಂಚಿಕೊಂಡಿದ್ದಾರೆ ಎಂದ ಅವರು, ತಕ್ಷಣ ಅಕ್ರಮ ಮರಳಿಗೆ ಅಧಿಕಾರಿಗಳು ತಡೆ ಮಾಡಬೇಕು ಇಲ್ಲವಾದರೇ ಮುಂದಿನ ದಿನದಲ್ಲಿ ಅಧಿಕಾರಿಗಳು ನೆರ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಸಿದ್ದಾರೆ.
ವೀಡಿಯೋ ಇಲ್ಲಿ ವೀಕ್ಷಿಸಿ👇
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್