ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ
ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ? ನಮಗೂ ಜವಾಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.
ನಾವೂ ಯಡಿಯೂರಪ್ಪನ ಮಕ್ಕಳನ್ನು ಸೋಲಿಸಬೇಕು ಅಂತಾ ಇದ್ದೇವೆ. ರಾಘವೇಂದ್ರನ ಸೋಲಿಸಬೇಕು ಎಂದು ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ ಶಾಸಕ ಬೇಳೂರು ಗೋಪಾಲಕೃಷ್ಣ, ಮಧು ಬಂಗಾರಪ್ಪ ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆಯ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು. ಅವರೇ ಪಕ್ಷವನ್ನು ಒಡೆಯುವುದಲ್ಲ ಎಂದು ಕಿಡಿಕಾರಿದರು.
ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ ಎಂದ ಶಾಸಕ ಬೇಳೂರು, ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾನೂ ಒಬ್ಬ ಪ್ರಬಲ ಆಕಾಂಕ್ಷಿ ಎಂದರು.
ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧವೂ ಹರಿಹಾಯ್ದ ಬೇಳೂರು, ಈಶ್ವರಪ್ಪ ಅವರದ್ದು ಹರಕು ನಾಲಗೆ. ಅವರ ಬಗ್ಗೆ ಮಾತನಾಡಲು ಹೇಸಿಗೆ ಅನಿಸುತ್ತದೆ. ಅಸಹ್ಯವಾಗುತ್ತದೆ. ಈಶ್ವರಪ್ಪ ಒಬ್ಬ ಹಿರಿಯ ನಾಯಕ. ಅವರ ಮೇಲೂ ಕೇಸುಗಳು ಇಲ್ವಾ? ಅವರು ಜೈಲಿಗೆ ಹೋಗ್ತಾರಾ? ಈಶ್ವರಪ್ಪನಂತಹ ಹೇಸಿಗೆ ಮನುಷ್ಯನ ಬಗ್ಗೆ ಹೇಳಲ್ಲ. ಹೇಳಲು ಅಸಹ್ಯವಾಗುತ್ತದೆ ಎಂದು ಕಿಡಿಕಾರಿದರು.
ಇನ್ನು, ಬಿಜೆಪಿ (BJP) ನಾಯಕರು 3 ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎನ್ನುತ್ತಾರೆ. ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ. ಯಡಿಯೂರಪ್ಪ ಅವತ್ತು ಚುನಾವಣೆಯಲ್ಲಿ ಮಿಷನ್ 150 ಅಂದರು. ಬಿಜೆಪಿ 65 ಸ್ಥಾನಕ್ಕೆ ಬಂತು. ಈಗ ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎನ್ನುತ್ತಾರೆ. ಯಾಕೆ ಅವರ ಮಗ ಅಧ್ಯಕ್ಷರಾದ ಕೂಡಲೇ ಪಕ್ಷ ಆಧಿಕಾರಕ್ಕೆ ಬರುತ್ತಾ? ಹಾಗಾದರೆ ಅವತ್ತು ಯಾಕೆ ಬರಲಿಲ್ಲ? ಹಾಗಾದರೆ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಮೋಸ ಮಾಡಿದ್ರಾ ಎಂದು ಪ್ರಶ್ನಿಸಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್