ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ
ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು
ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಆದರೂ ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದ ಸಮೀಪವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು ಪ್ರಾಥಮಿಕ ಹಂತದಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸರಕಾರ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿದೆ, ಸರಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ,ಹಾಲು, ಶೇಂಗಾ ಮಿಠಾಯಿ, ಶೂ, ಜೊತೆಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಸಹ ಪ್ರೋತ್ಸಾಹವನ್ನು ನೀಡುತ್ತಿದೆ,ಬಾಲ್ಯದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯಕ್ಕೆ ಬುನಾದಿ ಕಟ್ಟಿಕೊಡಬೇಕು ಎಂದರು.
ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು, ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವ ಮೂಲಕ,ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪೂರಕವಾದ ಯೋಜನೆಯ ಅನುಷ್ಠಾನದ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.
ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವರ್ಗದವರು ಗೌರವಿಸಿ ಅಭಿನಂದಿಸಿ ಸನ್ಮಾನಿಸಿದರು.
ಎಸ್ ಡಿಎಂಸಿ ಅಧ್ಯಕ್ಷ ಮಂಜಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ರಿಪ್ಪನ್ ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮೀ ಗಂಗಾಧರ್ , ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಕೇತ್ರ ಶಿಕ್ಷಣಾಧಿಕಾರಿ ಕೃಷ್ಣ ಮೂರ್ತಿ ಗ್ರಾಮ ಪಂಚಾಯತಿ ಸದಸ್ಯರಾದ ಡಿ ಇ ಮಧುಸೂಧನ್ , ಆಶೀಫ್ ಭಾಷಾ, ನಿರೋಪ್, ದಾನಮ್ಮ ,ಅಶ್ವಿನಿ ರವಿಶಂಕರ್, ಪ್ರಕಾಶ್ ಪಾಲೇಕರ್,ಗವಟೂರು ಗಣಪತಿ,ಪಿ ಎಸ್ ಐ ಪ್ರವೀಣ್ ಎಸ್. ಪಿ.,ಶಿಕ್ಷಣ ಇಲಾಖೆಯ ಜಗದೀಶ್ ಕಾಗಿನಲೆ ,ಕರಿಬಸಪ್ಪ, ಮಂಜುನಾಥ್ ,ಶಾಲೆಯ ಮುಖ್ಯೋಪಾಧ್ಯಾಯರಾದ ರೇಣುಕಪ್ಪ ಹಾಗೂ ಇತರರು ಇದ್ದರು.
ನಂತರ ನಡೆದ ಮನೋರಂಜನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನೃತ್ಯ, ಕಿರು ನಾಟಕ, ಜನಮನ ಸೂರೆ ಗೊಂಡಿತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್