ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದವರು ವಿದ್ಯಾರ್ಥಿನಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಘಟನೆಯಿಂದ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ.
ಫಯಾಜ್ನಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ನೇಹಾ, ತಂದೆ- ತಾಯಿ ಗಮನಕ್ಕೆ ತಂದಿದ್ದರು. ಪುತ್ರಿಯ ತಂಟೆಗೆ ಬಾರದಂತೆ ತಂದೆಯವರು ಫಯಾಜ್ಗೆ ಎಚ್ಚರಿಕೆ ನೀಡಿದ್ದರು’ ಎಂದು ಅವರು ತಿಳಿಸಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ನೇಹಾ ಮೃತದೇಹ ಕಂಡು ತಾಯಿ ಗೀತಾ ಹಿರೇಮಠ ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತು.
‘ನಮ್ಮ ಮಗಳು ನೇಹಾ ಬಹಳ ಸಂಪನ್ನೆ. ಯಾರೊಂದಿಗೆ ಗಲಾಟೆ ಮಾಡಿದವಳಲ್ಲ. ಬೆಳಿಗ್ಗೆ ನಾನೇ ಕಾಲೇಜಿಗೆ ಕಳುಹಿಸಿದ್ದೆ. ಕಾಲೇಜು ಮುಗಿಯುತ್ತಿದ್ದಂತೆ ನನಗೆ ಫೋನ್ ಮಾಡಿ, ಅಮ್ಮ ಕಾಲೇಜು ಮುಗಿಯಿತು. ಬರುತ್ತಿರುವೆ ಎಂದು ಹೇಳಿ ಹತ್ತು ನಿಮಿಷವಾಗಿರಲಿಲ್ಲ. ಅಷ್ಟರಲ್ಲಿ ಆಕೆಯ ಸಾವಿನ ಸುದ್ದಿ ಬಂತು’ ಎಂದು ತಾಯಿ ಗೀತಾ ಹಿರೇಮಠ ಮತ್ತು ಚಿಕ್ಕಮ್ಮ ಶೈಲಶ್ರೀ ಹಿರೇಮಠ ಸುದ್ದಿಗಾರರಿಗೆ ತಿಳಿಸಿದರು.
‘ನೇಹಾಗೆ ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿಗೆ ಸೇರಿಸಿದ್ದೆವು. ಆಕೆಗೆ ಆರೋಪಿಯಿಂದ ತೊಂದರೆ ಆಗುತ್ತಿರುವುದು ಗೊತ್ತಾಗಿತ್ತು. ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು’ ಎಂದು ನೇಹಾ ಚಿಕ್ಕಪ್ಪ ಶಿವಕುಮಾರ್ ಒತ್ತಾಯಿಸಿದರು.
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಹಾಕಿದ ಫಯಾಜ್
ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್