ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ
ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು.
ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆ ಹರಿಸುವ ನಿಟ್ಟಿನಲ್ಲಿ ಸಮಿತಿಯ ಪದಾಧಿಕಾರಿಗಳು ಗ್ರಾಮ ಪಟ್ಟದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಬಳಿಕ ರಾಜ್ಯ ವ್ಯಾಪಿ ಈವರೆಗೆ ಶೇ.84 ರಷ್ಟು ಸಾಧನೆ ಮಾಡಲಾಗಿದೆ. ಯೋಜನೆಗಳ ಫಲ ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪಬೇಕೆನ್ನುವುದು ಸರಕಾರದ ಆಶಯ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ಬಡವರ ಪರವಾಗಿದ್ದು, ತಳಹಂತದಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ತಿಸುತ್ತದೆ. ಇದು ಬಿಜೆಪಿ ಸರಕಾರದ ಕಾರ್ಯವೈಖರಿಯಲ್ಲಿ ಕಂಡು ಬರುವುದಿಲ್ಲ. ಕಪ್ಪು ಹಣ ಮರಳಿ ತರುವುದು, ಉದ್ಯೋಗ ಸೃಷ್ಠಿ, ರೈತರ ಆದಾಯ ದುಪ್ಪಟ್ಟುಗೊಳಿಸುವ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಹಾಗೂ ದಿನಬಳಕೆ ವಸ್ತುಗಳ ಬೆಲೆಏರಿಕೆಯಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನರೇಗಾ ಯೋಜನೆಗೆ ಅನುಷ್ಠಾನ ಕಡಿತಗೊಳಿಸುವ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಜಾತಿ, ಧರ್ಮದ ನಡುವೆ ಸಂಘರ್ಷ ಹುಟ್ಟು ಹಾಕಿ ಮತ ಪಡೆದು ಅಧಿಕಾರಕ್ಕೇರುವ ಬಿಜೆಪಿಯ ನೀತಿ ಈ ಬಾರಿ ಕೆಲಸ ಮಾಡುವುದಿಲ್ಲ ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾಂಗ್ರೆಸ್ ಪಕ್ಷಕ್ಕೆ ಮತಗಳಾಗಿ ಪರಿವರ್ತನೆ ಆಗಲಿವೆ. ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಲಿದ್ದೇವೆ. ರಾಜ್ಯ ಸರ್ಕಾರದ ಯೋಜನೆಗಳು ಬಡವರ ಪರವಾಗಿದ್ದು, ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿರುವುದು, ಮುಂಬರುವ ಚುನಾವಣೆಗೆ ಪಕ್ಷಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ ಎಂದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಟಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಪದಾಧಿಕಾರಿಗಳಾದ ರವೀಂದ್ರ ಕೆರೆಹಳ್ಳಿ, ರಮೇಶ್, ಹುಲುಗಾರು ಕೃಷ್ಣಮೂರ್ತಿ, ಪೂರ್ಣಿಮಾ, ಎಂ.ಪಿ ಲೋಹಿತ್, ಸುಮಂಗಲ ದೇವರಾಜ್, ನಾಸೀರ್, ಉಬೇದುಲ್ಲಾ ಮತ್ತಿತರರು ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್