Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ


ರಿಪ್ಪನ್‌ಪೇಟೆ : ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು “ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಘೋಷ ವಾಕ್ಯದಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನೀರು,ಕಾಳು ಮತ್ತು ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿ ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ.

ಹೌದು.. ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ ಬರಿದಾಗುತ್ತಿವೆ. ಪ್ರತಿನಿತ್ಯ ಜಲಕ್ಕಾಗಿ ಹೋರಾಟ  ನಡೆಸುವ ಪರಿಸ್ಥಿತಿಗೆ ನಾವು ಬಂದು ತಲುಪಿದ್ದೇವೆ. ಹಾಗೆಯೇ ಒಂದು ಕ್ಷಣ ಬೇಸಗೆಯಲ್ಲಿ ಪ್ರಾಣಿ-ಪಕ್ಷಿಗಳ ಸ್ಥಿತಿಯ ಬಗ್ಗೆ ಯೋಚಿಸಲೇ ಬೇಕಲ್ಲವಾ.. ನೀರಿನ ಮೂಲಗಳು ಬರಿದಾಗಿರುವಾಗ ಇವುಗಳ ಬಾಯಾರಿಕೆ ನೀಗಲು ನೆರವಾಗುವವರು ಯಾರು..? ಯಾವುದೇ ಜೀವಿಗಾದರೂ ಅವುಗಳ ದೇಹದ ತೂಕಕ್ಕೆ ತಕ್ಕಂತೆ ನಿರ್ದಿಷ್ಟ ಪ್ರಮಾಣದ ನೀರು ಕುಡಿಯಲೇಬೇಕು. ಮನುಷ್ಯ ಕಷ್ಟಪಟ್ಟಾದರು ಕುಡಿಯಲು ನೀರು ದಕ್ಕಿಸಿಕೊಳ್ಳುತ್ತಾನೆ. ಆದರೆ ಪ್ರಾಣಿ-ಪಕ್ಷಿಗಳ ಪಾಡು ಹೇಳತೀರದು. ಅವು ನೀರು ಸಿಗದೆ ಕೆಲವೊಮ್ಮೆ ಸಾವನ್ನಪ್ಪುತ್ತವೆ. ಆದ್ದರಿಂದ ಇಂತಹ ಪ್ರಾಣಿ – ಪಕ್ಷಿಗಳ ದಾಹ ನೀಗುವ ಕುರಿತು ಮನುಷ್ಯರಾದ ನಾವು ಸ್ವಲ್ಪ ಯೋಚಿಸಬೇಕಿದೆ.


ಈ ಹಿನ್ನಲೆಯಲ್ಲಿ ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ ಎಂಬ ಘೋಷ ವಾಕ್ಯದಡಿಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಇಲಾಖೆ ,ಅರಣ್ಯ ಇಲಾಖೆ ಹಾಗೂ ಪೋಸ್ಟ್ ಮ್ಯಾನ್ ಬಳಗದ ವತಿಯಿಂದ ಪಕ್ಷಿಗಳಿಗೆ ನೀರುಣಿಸುವ ಅಭಿಯಾನಕ್ಕೆ ಪಿಎಸ್‌ಐ ನಿಂಗರಾಜ್ ಕೆ ವೈ ಚಾಲನೆ ನೀಡಿದರು.

ಕರ್ತವ್ಯದ ಒತ್ತಡದ ನಡುವೆಯೂ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳ ತಂಡ ,ಅರಣ್ಯ ಅಧಿಕಾರಿ ಅಕ್ಷಯ್ ನೇತ್ರತ್ವದ ಸಿಬ್ಬಂದಿಗಳ ತಂಡ ಪಟ್ಟಣದ ಸರ್ಕಾರಿ ಕಛೇರಿಗಳಲ್ಲಿ, ಮೀಸಲು ಅರಣ್ಯ ಪ್ರದೇಶವಾದ ಕಣಬಂದೂರು, ಮುಗುಡ್ತಿ,ಕಾರಗೋಡು ಹಾಗೂ ವರಾನಹೊಂಡ ಅರಣ್ಯ ಪ್ರದೇಶದಲ್ಲಿ ಗಿಡಮರಗಳಿಗೆ ತೊಟ್ಟಿಗಳನ್ನು ಅಳವಡಿಸಿ, ನೀರು ತುಂಬಿ ಪಕ್ಷಿಗಳಿಗೆ  ನೀರುಣಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಈ ಸಂಧರ್ಭದಲ್ಲಿ ಮಾತನಾಡಿದ ಪಿಎಸ್‌ಐ ನಿಂಗರಾಜ್ ಕೆ ವೈ ಮಲೆನಾಡು ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಿದ್ದು ಪ್ರಾಣಿ ಪಕ್ಷಿಗಳಿಗೆ ಎಲ್ಲೂ ಕೂಡ ನೀರು ಸಿಗುವ ಅವಕಾಶ ಇಲ್ಲದಂತಾಗಿದ್ದು, ಇದನ್ನು ಮನಗಂಡು ನಮ್ಮ ಕೈಲಾದಂತಹ ಸಣ್ಣ ಸೇವೆಯನ್ನು ಮಾಡುವಂತೆ ಯೋಚನೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಸೂಚನೆ ಮೇರೆಗೆ ಈ ಕಾರ್ಯಕ್ರಮ ಹಮ್ಮಿಕೊಂಡಿರುತ್ತೇವೆ. ಸಾರ್ವಜನಿಕರು ತಮ್ಮ ತಮ್ಮ ಮನೆಯ ಸುತ್ತಮುತ್ತ ನೀರಿನ ತೊಟ್ಟಿಗಳನ್ನು ಅಳವಡಿಸುವ ಮೂಲಕ ಪ್ರಾಣಿ ಪಕ್ಷಿಗಳ ಸಂಕುಲಕ್ಕೆ ನೀರು ಉಣಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇಂತಹ ಕೆಲಸಗಳನ್ನು ಸಾರ್ವಜನಿಕರು ಮಾಡಿದರೆ ಮೂಕ ಪ್ರಾಣಿ, ಪಕ್ಷಿಗಳು ಬೇಸಿಗೆಯ ದಾಹದಿಂದ ಮುಕ್ತಿಹೊಂದಲು ಸಾಧ್ಯವಾಗುತ್ತದೆ. ನಾವು ಮಾಡುವ ಚಿಕ್ಕದೊಂದು ಕಾರ್ಯದಿಂದ ಒಂದೇ ಒಂದು ಪಕ್ಷಿಯ ದಾಹ ತಣಿದರೂ ಅದು ಮಹತ್ಕಾರ್ಯವೇ ಎಂದರು.

ಅರಣ್ಯ ಅಧಿಕಾರಿ ಅಕ್ಷಯ್ ಕುಮಾರ್ ಮಾತನಾಡಿ ಈ ವರ್ಷ ಭೀಕರ ಬರಗಾಲ ಎದುರಾಗಿದೆ. ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆಯಂತೂ ಹೇಳತೀರದು. ಜೊತೆಗೆ ದಿನನಿತ್ಯದ ಬಳಕೆಗೆ, ಕೃಷಿಗೆ ನೀರಿನ ಅಭಾವ ಉಂಟಾಗಿದೆ. ಮನುಷ್ಯರು ಅಷ್ಟೆ ಅಲ್ಲ ಪ್ರಾಣಿ ಪಕ್ಷಿಗಳೂ ಕುಡಿಯಲು ನೀರು ಸಿಗದೇ ಒದ್ದಾಡುತ್ತಿವೆ.ದಯೆಯೇ ಧರ್ಮದ ಮೂಲವಯ್ಯ ಎಂಬ ನುಡಿಮುತ್ತಿನಂತೆ ಸಾರ್ವಜನಿಕರು ಪ್ರಾಣಿ ಪಕ್ಷಿಗಳಿಗೆ ನೀರುಣಿಸಿ ನೆರವಾಗಬೇಕು ಎಂದರು.

ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನ ರಫ಼ಿ ರಿಪ್ಪನ್‌ಪೇಟೆ, ಸೆಬಾಸ್ಟಿಯನ್ , ಆನಂದ್ ಮೆಣಸೆ , ಅರಣ್ಯ ಇಲಾಖೆಯ ಭರತ್ ಹಾಗೂ ಹರೀಶ್ ಸಿಬ್ಬಂದಿಯವರಾದ ನಾಗರಾಜ್ ಮತ್ತು ಯಶ್ವಂತ್, ಪೋಲಿಸ್ ಇಲಾಖೆ ಸಿಬ್ಬಂದಿಗಳಾದ ಉಮೇಶ್, ಯೋಗೇಂದ್ರ,ಪ್ರವೀಣ್, ಶಿವಕುಮಾರ್ ನಾಯಕ್, ಮಧುಸೂಧನ್ ಹಾಗೂ ಇನ್ನಿತರರಿದ್ದರು.

———————————

ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುತ್ತಿರುವ ಅಧಿಕಾರಿಗಳ ಸೇವೆ ಮೆಚ್ಚುವಂತದ್ದು, ಕೆಲವೆಡೆ ನೀರಿಲ್ಲದೇ ಅನೇಕ ಪಕ್ಷಿಗಳು ಸಾವನ್ನಪ್ಪಿದ ವರದಿಗಳು ಆಗಿವೆ. ಹೀಗಾಗಿ ನೀವಿರುವ ಜಾಗದ ಸುತ್ತಮುತ್ತಲು, ಪಕ್ಷಿಗಳು ಬಂದು ಹೋಗುವ ಜಾಗಗಳಲ್ಲಿ ನೀರಿನ ವ್ಯವಸ್ಥೆ ಮಾಡಿ. ಇದು ಪೋಸ್ಟ್ ಮ್ಯಾನ್ ನ್ಯೂಸ್ ನ ಕಳಕಳಿಯೂ ಕೂಡ.

ಹೀಗೆ ನೆರವಾಗಬಹುದು

ಮನೆಯ ಸಮೀಪ ಅಥವಾ ಇತರ ಸ್ಥಳಗಳಲ್ಲಿ ತೊಟ್ಟಿ ನಿರ್ಮಿಸಿ ಅಥವಾ ಪಾತ್ರೆಗಳಲ್ಲಿ ನೀರು ಸಂಗ್ರಹಿಸಿಟ್ಟರೆ ಪ್ರಾಣಿ – ಪಕ್ಷಿಗಳು ತಮ್ಮ ಜಲದಾಹ ತೀರಿಸಿಕೊಳ್ಳುತ್ತವೆ ಹಾಗೂ ಪಕ್ಷಿಗಳಿಗೆ ಮನೆಯ ಛಾವಣಿಯ ಮೇಲೆ, ಇತರ ತೆರೆದ ಸ್ಥಳಗಳಲ್ಲಿ ಬಾಟಲಿ, ಕುಂಡಗಳಲ್ಲಿ ನೀರು ಹಾಕಿಡಬಹುದು. ನೀರಿನ ಜತೆಗೆ ಸ್ವಲ್ಪ ಅಕ್ಕಿ ಮುಂತಾದ ಆಹಾರ ಧಾನ್ಯಗಳನ್ನು ಇಟ್ಟರೆ ಪಕ್ಷಿಗಳಿಗೆ ಅನುಕೂಲವಾಗುತ್ತದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago