ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು.
ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು.
ನಾಮಪತ್ರ ಸಲ್ಲಿಕೆ ನಂತರ ಇಲ್ಲಿನ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಮೆರವಣಿಗೆ ಆರಂಭಗೊಂಡಿತು. ಮೆರವಣಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು.
ಉರಿ ಬಿಸಿಲಿನಲ್ಲಿ ತೆರೆದ ವಾಹನದಲ್ಲಿ ಹೊರಟ ಗೀತಾ ಶಿವರಾಜಕುಮಾರ್ ಅವರ ಮೆರವಣಿಗೆಯಲ್ಲಿ ಬೊಂಬೆ ಕುಣಿತ, ವಾದ್ಯ ಮೇಳಗಳು ರಂಗು ತುಂಬಿತು. ಈ ವೇಳೆ ಬೆಂಬಲಿಗರು ಹೂವಿನ ಮಳೆ ಸುರಿಸಿದರು.
ಮೆರವಣಿಗೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದವರಿಗೆ ಮಜ್ಜಿಗೆ, ನೀರಿನ ಪ್ಯಾಕೆಟ್ ಹಂಚಲಾಯಿತು.
ಮೆರವಣಿಗೆ ಗಾಂಧಿ ಬಜಾರ್ಗೆ ಬರುತ್ತಿದ್ದಂತೆಯೇ ಇಲ್ಲಿನ ವಿವಿಧ ಸಂಘಟನೆಯ ಮುಖಂಡರಿಂದ ಗೀತಾ ಶಿವರಾಜಕುಮಾರ ಅವರಿಗೆ ಹೂವಿನ ಹಾಕಿ, ಉಡಿ ತುಂಬಿ ಹರಸಿದರು. ಸೇಬು ಹಣ್ಣಿನ ಹಾರ ಹಾಕಿ ಬೆಂಬಲ ಸೂಚಿಸಿದರು.
ಮೆರವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪ್ಲೇಕಾರ್ಡ್ ರಾರಾಜಿಸಿದವು. ಮೇರವಣಿಗೆಯ ದಾರಿಯುದ್ದಕ್ಕೂ ಸಚಿವ ಮಧುಬಂಗಾರಪ್ಪ ಹಾಗೂ ಶಿವರಾಜಕುಮಾರ್ ಅವರು ಮತಯಾಚಿಸಿದರು.
ಬಿಸಿಲಿನ ಅಬ್ಬರದ ನಡುವೆ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಲೋಕಸಭಾ ಚುನಾವಣೆ ಕಾವು ಹೆಚ್ಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ,ನಟ ಶಿವರಾಜಕುಮಾರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್, ಬಿ.ಕೆ.ಸಂಗಮೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ, ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಕೆ.ಸುಕುಮಾರ್ ಶೆಟ್ಟಿ, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಸೂಡ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಮುಖಂಡರಾದ ಎಂ.ಶ್ರೀಕಾಂತ, ಎಚ್.ಸಿ.ಯೋಗೀಶ್, ಎನ್.ರಮೇಶ್, ಶ್ರೀನಿವಾಸ ಕರಿಯಣ್ಣ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್