ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್ಐ ಪ್ರವೀಣ್ ಎಸ್ ಪಿ
ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್ಐ ಪ್ರವೀಣ್ ಎಸ್ ಪಿ ತಿಳಿಸಿದರು.
ರಿಪ್ಪನ್ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆ’ಯಲ್ಲಿ ಅವರು ಮಾತನಾಡಿ ‘ಹದಿಹರೆಯದವರು ಮತ್ತು ಯುವಜನರಲ್ಲಿ ಸಣ್ಣ, ಸಣ್ಣ ಆಕರ್ಷಣೆ ಮಾದಕ ಸೇವನೆಯ ಪ್ರಯತ್ನ ಮಾಡಿಸುತ್ತದೆ. ಪ್ರಯತ್ನ ಚಟವಾಗಿ ಬದಲಾಗಲಿದೆ. ಒಂದು ಬಾರಿ ಮಾದಕ ವಸ್ತುಗಳ ದುಶ್ಚಟಕ್ಕೆ ಸಿಲುಕಿದರೆ, ಮಾದಕ ಜಗತ್ತು ತನ್ನ ಭ್ರಮಾ ಲೋಕಕ್ಕೆ ಸೆಳೆದುಕೊಳ್ಳುತ್ತದೆ. ಸಣ್ಣದಾಗಿ ಆರಂಭವಾದ ಚಟ ಹಂತ ಹಂತವಾಗಿ ದೊಡ್ಡದಾಗುತ್ತದೆ. ಕೆಲಸವಿಲ್ಲದ ಯುವಕರು ಹಣ ಹೊಂದಿಸಲು ಸಾಧ್ಯವಾಗದೇ, ದುಶ್ಚಟವನ್ನು ಬಿಡಲು ಸಾಧ್ಯವಾಗದೇ, ಕಳ್ಳತನ ಮತ್ತು ದರೋಡೆಗಳಂತಹ ಸಮಾಜಘಾತುಕ ಕೃತ್ಯಗಳಿಗೆ ಇಳಿಯುತ್ತಾರೆ. ಯುವಕರು ಈ ಮೋಸದ ಜಾಲಕ್ಕೆ ಸಿಲುಕುವ ಮುನ್ನ ಜಾಗೃತರಾಗಿರಬೇಕು ಮತ್ತು ಸುತ್ತಮುತ್ತಲಿನ ಸಮಾಜಕ್ಕೂ ಈ ದುಷ್ಕೃತ್ಯದ ಬಗ್ಗೆ ಜಾಗೃತಿ ಮೂಡಿಸಿ’ ಎಂದು ಸಲಹೆ ನೀಡಿದರು.
ನಿಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಬಗೆಯ ಮಾದಕ ವಸ್ತುಗಳ ಬಳಕೆ ಮಾಡುವುದು, ಮತ್ತು ಸಾಗಣೆ ಮಾಡುವುದು ಕಂಡು ಬಂದರೇ, ಜಾಲದ ಬಗ್ಗೆ ನಿಮಗೆ ಮಾಹಿತಿ ದೊರತರೂ ಅಪರಾಧ ಕೃತ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾದಕ ವಸ್ತುಗಳ ಸಾಗಣೆಯ ಜಾಲ ತಡೆಗಟ್ಟುವ ಮೂಲಕ ಸದೃಢ ಭಾರತ ಕಟ್ಟುವ ಸಂಕಲ್ಪಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಕಾಲೇಜು ದಿನಗಳಲ್ಲಿ ಕಾಣಿಸುವ ಕುತೂಹಲಗಳನ್ನು ಬದಿಗೊತ್ತಿ, ದುಶ್ಚಟಗಳಿಂದ ದೂರವಿರಿ. ಉತ್ತಮ ಕಲಿಕೆಯ ಕಡೆಗೆ ಗಮನ ಕೊಡಿ, ಜ್ಞಾನ ಹೆಚ್ಚಿಸಿಕೊಳ್ಳುವ ಮೂಲಕ ಜಗತ್ತನ್ನು ಅರಿತುಕೊಳ್ಳಿ, ಸಕಾಲಕ್ಕೆ ಸಮಾಜದಲ್ಲಿ ಸೂಕ್ತ ಸ್ಥಾನಮಾನ ಲಭಿಸಲಿದೆ. ಆಗ ಸಮಾಜವೇ ನಿಮ್ಮನ್ನು ಗೌರವಿಸಲಿದೆ ಎಂದರು.
ಈ ಸಂದರ್ಭದಲ್ಲಿ ರಿಪ್ಪನ್ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಎ ಮಂಜುನಾಥ್ , ಅಮೃತ ಕಾಲೇಜಿನ ಪ್ರಾಂಶುಪಾಲ ಮಹಮದ್ ನಜಹತ್ ಉಲ್ಲಾ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ಚೆನ್ನಪ್ಪ ಡಿ, ಸಂತೋಷ್ ಕೊರವರ ಮತ್ತು ಮಧುಸೂಧನ್ ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply