Breaking
12 Jan 2026, Mon

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ | Mescom

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ

ರಿಪ್ಪನ್‌ಪೇಟೆ : ಆಧಾರ್ ಕಾರ್ಡ್ ಗೆ ರೈತರ ಕೃಷಿ ಪಂಪ್ ಸೆಟ್ ಗಳ RR ಸಂಖ್ಯೆ ಲಿಂಕ್ ಮಾಡಬೇಕಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗುವಂತೆ Hosanagara ಮೆಸ್ಕಾಂ ಅಧಿಕಾರಿಗಳು 22/07/2024 ರ ಸೋಮವಾರ ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಉಪಸ್ಥಿತರಿರುತ್ತಾರೆ.

ಕೃಷಿ ಪಂಪ್ ಸೆಟ್ ಹೊಂದಿರುವ ರೈತರು ಇದರ ಸದುಪಯೋಗ ಪಡಿಸಿಕೊಂಡು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಪಟ್ಟಣದ ಮೆಸ್ಕಾಂ ಇಲಾಖೆಯ ಅಭಿಯಂತರ ಅಶ್ವಲ್ ಮನವಿ ಮಾಡಿಕೊಂಡಿದ್ದಾರೆ.

ಏನಿದು ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ್ ಲಿಂಕ್ ..!!??

ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ಸಂಖ್ಯೆಯನ್ನು ಗ್ರಾಹಕರ ಆಧಾರ್‌ ಸಂಖ್ಯೆಗೆ ಜೋಡಣೆ ಮಾಡುವ ಪ್ರಕ್ರಿಯೆಗೆ ವಿದ್ಯುತ್‌ ಸರಬರಾಜು ಕಂಪೆನಿ (ಎಸ್ಕಾಂ)ಗಳು ಸದ್ದಿಲ್ಲದೆ ಚಾಲನೆ ನೀಡಿವೆ. ಬಹುತೇಕ ಕಡೆಗಳಲ್ಲಿ ಆಧಾರ್‌-ಆರ್‌.ಆರ್‌. ಸಂಖ್ಯೆಗೆ ಹೊಂದಾಣಿಕೆ ಆಗದಿರುವುದು ಕಂಡುಬಂದಿದ್ದು, ಮುಂಬರುವ ದಿನಗಳಲ್ಲಿ ಸಬ್ಸಿಡಿಗೆ ಕತ್ತರಿ ಬೀಳುವ ಆತಂಕ ರೈತರನ್ನು ಕಾಡತೊಡಗಿದೆ.

ಗ್ಯಾರಂಟಿ ಯೋಜನೆಗಳ ಸಹಿತ ಸರಕಾರದ ವಿವಿಧ ಸಬ್ಸಿಡಿ ಯೋಜನೆಗಳಿಗೆ ಈಗಾಗಲೇ ಆಧಾರ್‌ ಸಂಖ್ಯೆ ಜೋಡಣೆ ಮಾಡಲಾಗಿದೆ. ಮುಂದುವರಿದ ಭಾಗವಾಗಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) 2024-25ನೇ ಸಾಲಿನ ವಿದ್ಯುತ್‌ ದರ ಪರಿಷ್ಕರಣೆ ಆದೇಶದಲ್ಲಿ ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ಸಂಖ್ಯೆಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸಿದ್ದು, ಈ ಸಂಬಂಧ ಎಸ್ಕಾಂಗಳಿಗೆ ಸೂಚನೆ ನೀಡಿತ್ತು. ಅದರಂತೆ 10 ಎಚ್‌ಪಿ ಸಾಮರ್ಥ್ಯದ ವರೆಗಿನ ಪಂಪ್‌ಸೆಟ್‌ ಹೊಂದಿರುವ ರೈತರ ಆಧಾರ್‌ ಸಂಖ್ಯೆ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ಆದರೆ ಹೀಗೆ ಸಂಗ್ರಹಿಸಲಾದ ಬಹುತೇಕ ಆರ್‌.ಆರ್‌. ಸಂಖ್ಯೆಗಳಿಗೆ ಮತ್ತು ಆಧಾರ್‌ ಸಂಖ್ಯೆಗೆ ತಾಳೆ ಆಗುತ್ತಿಲ್ಲ.

ಎಷ್ಟೋ ಕಡೆಗಳಲ್ಲಿ ಹೆಸರು ಬದಲಾಗಿದೆ. ಮತ್ತೆ ಹಲವು ಕಡೆಗಳಲ್ಲಿ ತಪ್ಪಾಗಿ ಮುದ್ರಿತವಾಗಿದೆ. ಈ ಬಗ್ಗೆ ರೈತರನ್ನು ಕೇಳಿದರೆ ಅವರ ತಂದೆ ಅಥವಾ ತಾತನ ಹೆಸರಿನಲ್ಲಿ ಪಂಪ್‌ಸೆಟ್‌ ಇದ್ದು, ಬದಲಾವಣೆ ಮಾಡಿಕೊಂಡಿರುವುದಿಲ್ಲ. ಸದ್ಯ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ ಹಂತದಲ್ಲಿದೆ. ಹಾಗಾಗಿ ಇದರ ಬಿಸಿ ತಟ್ಟದಿರಬಹುದು. ಮುಗಿದ ಅನಂತರ ತಾಳೆಯಾಗದ ರೈತರ ಸಬ್ಸಿಡಿಗೆ ಕತ್ತರಿ ಬೀಳಲಿದೆಯೇ ಎಂಬ ಆತಂಕ ಕಾಡತೊಡಗಿದೆ.

ರಾಜ್ಯದಲ್ಲಿ ಸುಮಾರು 34.17 ಲಕ್ಷ

ರೈತರು ಸರಕಾರವು ಕೃಷಿ ಪಂಪ್‌ಸೆಟ್‌ಗಳಿಗೆ ನೀಡುವ ಉಚಿತ ವಿದ್ಯುತ್‌ನ ಫ‌ಲಾನುಭವಿಗಳಾಗಿದ್ದು, ವಾರ್ಷಿಕ ಅಂದಾಜು 21 ಸಾವಿರ ಮಿಲಿಯನ್‌ ಯೂನಿಟ್‌ ವಿದ್ಯುತ್‌ ಪೂರೈಸಲಾಗುತ್ತಿದೆ. ಇದರ ಸಬ್ಸಿಡಿ ಮೊತ್ತ ಸುಮಾರು 10-11 ಸಾವಿರ ಕೋಟಿ ರೂ. ಆಗಿದ್ದು, ಆಯಾ ಎಸ್ಕಾಂಗಳಿಗೆ ಈ ಮೊತ್ತವನ್ನು ಸರಕಾರ ಪಾವತಿಸುತ್ತದೆ.

ಅನುಮತಿ ಕಡ್ಡಾಯ; ಪ್ರಾಧಿಕಾರಕ್ಕೆ ಪತ್ರ

ಈ ನಡುವೆ ಮೂಲಗಳ ಪ್ರಕಾರ ಈಗಾಗಲೇ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ಸಹಿತ ಎಲ್ಲ ಎಸ್ಕಾಂಗಳು ರೈತರ ಆಧಾರ್‌ ಸಂಖ್ಯೆಯನ್ನು ಸಂಗ್ರಹಿಸಿ, ಆಯಾ ಆರ್‌.ಆರ್‌. ಸಂಖ್ಯೆಯುಳ್ಳ ದತ್ತಾಂಶದೊಂದಿಗೆ ದಾಖಲಿಸಿವೆ. ಆದರೆ ಲಿಂಕ್‌ ಮಾಡಲು ಸಾಧ್ಯವಾಗಿಲ್ಲ. ಇದಕ್ಕೆ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ ಅನುಮತಿ ಕಡ್ಡಾಯ ಎನ್ನಲಾಗಿದೆ. ಈ ಸಂಬಂಧ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಅನುಮತಿ ದೊರೆತೊಡನೆ ಜೋಡಣೆ ಮಾಡುವ ಕೆಲಸ ಆರಂಭವಾಗಲಿದೆ.

ಉದ್ದೇಶ ಏನು?

-ಸರಕಾರ ಪ್ರತೀ ವರ್ಷ ಎಸ್ಕಾಂಗಳಿಗೆ ನೀಡುತ್ತಿ ರುವ ಸಬ್ಸಿಡಿಗೂ ವಿದ್ಯುತ್‌ ಬಳಕೆಗೂ ಹೋಲಿಕೆ ಆಗುತ್ತಿದೆಯೇ ಎಂದು ಖಾತ್ರಿಪಡಿಸಿಕೊಳ್ಳುವುದು.

-ಅಕ್ರಮ ಪಂಪ್‌ಸೆಟ್‌ಗಳಿಗೆ ಕಡಿವಾಣ ಹಾಕುವುದು.

-ಸಬ್ಸಿಡಿ ನಿಜವಾದ ಫ‌ಲಾನುಭವಿಗೆ ಹೋಗುತ್ತಿದೆಯೇ ಎಂಬುದನ್ನು ದೃಢಪಡಿಸಿಕೊಳ್ಳುವುದು.

-ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಪಡೆಯುತ್ತಿರುವ ಶ್ರೀಮಂತರ ಪತ್ತೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Leave a Reply

Your email address will not be published. Required fields are marked *