ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation
SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್ ಬಂಕ್ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ.
ಗೋಗ್ಯಾಸ್ ಎಲ್ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು.
ಘಟಕದಲ್ಲಿನ ಮದರ್ ಬೋರ್ಡ್ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ ಅವಧಿಯವರೆಗೆ ಕಾನೂನು ಮಾಪನ ಶಾಸ್ತ್ರ ಇಲಾಖೆ ಪರಿಶೀಲನೆ ನಡೆಸಿ ಅದನ್ನು ಶೀಲ್ ಮಾಡುವ ನಿಯಮ ಚಾಲ್ತಿಯಲ್ಲಿದೆ. ಮಹೇಶ್ವರಪ್ಪ ಅವರು ಅಳತೆಯಲ್ಲಿ ಗ್ರಾಹಕರಿಗೆ ವಂಚಿಸುವ ಉದ್ದೇಶದಿಂದ ಈ ಶೀಲ್ನ್ನು ಒಡೆದು ಪ್ರತ್ಯೇಕ ಮದರ್ ಬೋರ್ಡ್ ಅಳವಡಿಸಿರುವುದು ಕಂಪೆನಿಯ ಗಮನಕ್ಕೆ ಬಂದಿತ್ತು.
ಜು.5ರಂದು ಗೋಗ್ಯಾಸ್ ಕಂಪೆನಿಯ ವಿಚಕ್ಷಣ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಕಾನೂನುಬಾಹಿರ ಕೃತ್ಯ ಬೆಳಕಿಗೆ ಬಂದಿದೆ.
ಈ ವೇಳೆ ಮಹೇಶ್ವರಪ್ಪ ಸ್ಥಳದಿಂದ ಪರಾರಿಯಾಗಿದ್ದಾರೆ. ಗೋಗ್ಯಾಸ್ ಕಂಪೆನಿ ಈ ಸಂಬಂಧ ಶಿವಮೊಗ್ಗದ ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ದೂರು ನೀಡಿದ್ದು ಬುಧವಾರ ಸ್ಥಳಕ್ಕೆ ಆಗಮಿಸಿದ ಇಲಾಖೆಯ ಸಹಾಯಕ ನಿಯಂತ್ರಕ ರಾಜು ಎಚ್.ಎಸ್. ಹಾಗೂ ಸಿಬ್ಬಂದಿ ವರ್ಗದವರು ಮಹಜರ್ ಕ್ರಮ ಜರುಗಿಸಿ ಬಂಕ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಗ್ರಾಹಕರಿಗೆ ವಂಚಿಸಿದ ಆರೋಪದ ಮೇರೆಗೆ ಎಂ.ಆರ್. ಮಹೇಶ್ವರಪ್ಪ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಮಾಪನ ಕಾಯ್ದೆ ಕಲಂ 26 ರಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್