ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ದೆವ್ವ – ಪೊಲೀಸರಿಂದ ಖಡಕ್ ವಾರ್ನಿಂಗ್
ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಗರದ ಕಾರ್ಗಲ್ನಲ್ಲಿ ಭೂತದ ಕಾಟದ ಕಾರಣ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು ಫೋಟೋಗಳ ಸಹಿತ ಸುದ್ದಿ ಹರಿದಾಡಿ ಜನ ಆತಂಕಿತರಾದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸ್ ಇಲಾಖೆ, ಈ ಸುಳ್ಳು ಸುದ್ದಿ ಹರಡಿ ಕುಚೋದ್ಯ ಮಾಡಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.
ಅ. 27 ರಂದು ರಾತ್ರಿ ತಾಲೂಕಿನ ಕಾರ್ಗಲ್ನ ಸಮೀಪ ಕಂಚಿಕೈ ರಸ್ತೆಯಲ್ಲಿ ಎರಡು ಜನ ಬೈಕ್ ಸವಾರರಿಗೆ ದೆವ್ವ ಎದುರಾಗಿ ಅಪಘಾತವಾಗಿದೆ. ಒಬ್ಬರಿಗೆ ತುಂಬಾ ಸೀರಿಯಸ್ ಆಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುತ್ತಾರೆಂದು ಪೋಟೋ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿತ್ತು.
ಈ ಕುರಿತಾಗಿ ಸಾಗರ ಉಪವಿಭಾಗದ ಕಾರ್ಗಲ್ ಪೊಲೀಸ್ ಠಾಣೆ ಅಧಿಕೃತ ಪ್ರಕಟಣೆ ನೀಡಿದ್ದು, ಇದು ಸುಳ್ಳು ಸುದ್ದಿಯಾಗಿದೆ. ಸಾರ್ವಜನಿಕರು ಭಯಪಡುವ ಅವಶ್ಯಕತೆ ಇರುವುದಿಲ್ಲ.
ಈ ರೀತಿಯ ಯಾವುದೇ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಇಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಕಾನೂನು ರೀತಿಯ ಅಪರಾಧವಾಗಿದೆ. ಈ ರೀತಿ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್