ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು
ಹುಂಚ ಕಲ್ಲು ಕ್ವಾರೆಯಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿಯ ನಿಗೂಡ ಸಾವು – ಪೊಲೀಸ್ ತನಿಖೆ ಚುರುಕು
ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಉದಯ್ (26) ಎಂಬ ಕಾರ್ಮಿಕ ಹೊಂಡಲಗದ್ದೆಯ ಕ್ವಾರೆಯೊಂದರಲ್ಲಿ ಕೆಲಸ ಮಾಡುತಿದ್ದು ಶುಕ್ರವಾರ ರಾತ್ರಿ ನಿಗೂಡವಾಗಿ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ನಡೆದಿದ್ದೇನು ..!!??
ಉತ್ತರ ಭಾರತದ ಹಲವು ಕಾರ್ಮಿಕರು ಈ ಕಲ್ಲು ಕ್ವಾರೆಯಲ್ಲಿ ಕೆಲಸ ನಿರ್ವಹಿಸುತಿದ್ದು ಶುಕ್ರವಾರ ರಾತ್ರಿ ಜಾರ್ಖಂಡ್ ಮೂಲದ ಉದಯ್ ನಿಗೂಡವಾಗಿ ಸಾವನ್ನಪ್ಪಿದ್ದಾನೆ. ಶುಕ್ರವಾರ ರಾತ್ರಿ ವಿಪರೀತ ಸಿಡಿಲು ಸಹಿತ ಮಳೆಯಾಗಿದ್ದು ಉದಯ್ ಸಿಡಿಲು ಬಡಿದು ಸಾವನ್ನಪ್ಪಿರಬಹುದು ಅಥವಾ ಗಣಿ ಬ್ಲಾಸ್ಟ್ ನಿಂದ ಸತ್ತಿರಬಹುದು ಎಂಬ ಊಹಾಪೋಹಗಳು ಸ್ಥಳೀಯರಲ್ಲಿ ಹುಟ್ಟಿಕೊಂಡಿತ್ತು.
ಈ ಉಹಾಪೋಹಗಳಿಗೆ ಪೂರಕವೆಂಬಂತೆ ಕಲ್ಲು ಕ್ವಾರೆಯ ಮಾಲೀಕರು ಹಾಗೂ ಸಂಬಂಧಿಸಿದವರು ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ಮುಟ್ಟಿಸದೇ ಆತುರ ಆತುರದಲ್ಲಿ ಕೋಣಂದೂರು ಆಸ್ಪತ್ರೆಗೆ ಮೃತದೇಹವನ್ನು ಕರೆದೊಯ್ದು ಸ್ವಾಭಾವಿಕ ಸಾವು ಎಂಬ ರಿಪೋರ್ಟ್ ರೆಡಿ ಮಾಡಿಸಿ ರಾತ್ರೋರಾತ್ರಿ ಮೃತದೇಹವನ್ನು ಜಾರ್ಖಂಡ್ ಗೆ ಕಳುಹಿಸಿಕೊಟ್ಟಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಪೊಲೀಸ್ ತನಿಖೆ ಚುರುಕು :
ಘಟನೆಯ ಬಗ್ಗೆ ಮಾಹಿತಿ ತಿಳಿದ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಸಂಬಂಧಿಸಿದವನ್ನು ವಿಚಾರಣೆಗೆ ಒಳಪಡಿಸಿ ಘಟನೆಯ ಸತ್ಯಾಸತ್ಯತೆ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಜಾರ್ಖಂಡ್ ಗೆ ಕರೆದೊಯ್ದಿದ್ದ ಉದಯ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಾಪಾಸ್ಸು ಕರೆತರಲಾಗುತ್ತಿದೆ ಎನ್ನಲಾಗುತ್ತಿದೆ.
ಜಾರ್ಖಂಡ್ ನಿಂದ ತುತ್ತು ಅನ್ನಕ್ಕಾಗಿ ವಲಸೆ ಬಂದಿದ್ದ ಬಡ ಕಾರ್ಮಿಕ ಉದಯ್ ಸಿಡಿಲು ಬಡಿದು ಸತ್ತರೋ..!? ಗಣಿ ಬ್ಲಾಸ್ಟ್ ನಿಂದ ಸತ್ತರೋ ಅಥವಾ ಹೃದಯಾಘಾತದಿಂದ ಸತ್ತರೋ ಎಂಬ ಸತ್ಯಾಸತ್ಯತೆ ಪಿಎಸ್ಐ ಪ್ರವೀಣ್ ಎಸ್ ಪಿ ರವರ ನಿಷ್ಪಕ್ಷಪಾತ ತನಿಖೆಯಿಂದ ತಿಳಿದುಬರಬೇಕಾಗಿದೆ..
