ಸೊರಬ: ಪುರಸಭೆ ವ್ಯಾಪ್ತಿಯ ಕೊಡಕಣಿ ಗ್ರಾಮದ ಹಳ್ಳಿಕೆರೆಯಲ್ಲಿ ಮಂಗಳವಾರ ಮೀನು ಬೇಟೆ ಸಂಭ್ರಮದಿಂದ ಜರುಗಿತು. ಗ್ರಾಮಸ್ಥರು ಹಿರಿಯರು, ಕಿರಿಯರೆನ್ನದೆ ಕೆರೆ ಬೇಟೆಯಲ್ಲಿ ಪಾಲ್ಗೊಂಡಿದ್ದರು.
ಏಷ್ಯಾ ಖಂಡದಲ್ಲಿಯೇ ಅತಿ ಹೆಚ್ಚು ಕೆರೆಗಳನ್ನು ಹೊಂದಿರುವ ತಾಲೂಕಿನಲ್ಲಿ ಕೆರೆ ಬೇಟೆ ವಿಶೇಷವಾಗಿ ನಡೆಯುತ್ತದೆ. ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಪಾಲ್ಗೊಳ್ಳುವವರು ಏಕ ಕಾಲದಲ್ಲಿ ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು ನೋಡಲು ನೂರಾರು ಜನ ಆಗಮಿಸುತ್ತಾರೆ. ಮಳೆಗಾಲದ ಸಂದರ್ಭದಲ್ಲಿ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ನಂತರ ಬೇಸಿಗೆಯಲ್ಲಿ ಕೆರೆಗಳು ಬತ್ತಿದಾಗ ಕೆರೆಬೇಟೆ ಸಾರಲಾಗುತ್ತದೆ. ಈ ವೇಳೆ ಗ್ರಾಮಸ್ಥರಲ್ಲಿ ಎಲ್ಲಿಲ್ಲದ ಸಡಗರ.
ಗ್ರಾಮದಲ್ಲಿ ನಡೆದ ಕೆರೆಬೇಟೆಯಲ್ಲಿ ಕೂಣಿ ಹಾಗೂ ಜರಡಿ ಬಲೆಗೆ ಅವಕಾಶ ಕಲ್ಪಿಸಲಾಗಿತ್ತು. ಗ್ರಾಮಸ್ಥರು ಮಾತ್ರವೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಆದರೂ ಕೆಲ ಗ್ರಾಮಸ್ಥರು ತಮ್ಮ ಸಂಬಂಧಿಗಳನ್ನು ಕೆರೆಗೆ ಇಳಿಸಿ ಮೀನುಗಳನ್ನು ಹಿಡಿದರು. ಕೆಲವರಿಗೆ ಸುಮಾರು ೫ಕೆ.ಜಿ ವರೆಗೆ ಮೀನು ಲಭಿಸಿದರೆ, ಕೆಲವರು ಚಿಕ್ಕ ಮೀನುಗಳನ್ನು ಹಿಡಿದು ತೃಪ್ತಿಪಟ್ಟುಕೊಂಡರು.
ವಿಶೇಷವೆಂದರೆ, ಬಿದರಿನ ಕೂಣಿಯ ಜಾಗದಲ್ಲಿ ಕಬ್ಬಿಣದ ಕೂಣಿಗಳು ಸಹ ಬಳಸಲಾಯಿತು. ಗ್ರಾಮ ಸಮಿತಿಯವರು ಯಾವುದೇ ಗಲಾಟೆ ಮತ್ತು ಗೊಂದಲಗಳಿಗೆ ಅವಕಾಶ ನೀಡದಂತೆ ಅಚ್ಚುಕಟ್ಟಾಗಿ ನಿರ್ವಹಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್