ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ
ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು.
ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ (ಪಿಎಫ್) ಎಂಬ ಉಲ್ಲೇಖವನ್ನು ಕೈಬಿಡುವುದು, ಮೀಸಲು ಅರಣ್ಯದ ಅಂತಿಮ ಅಧಿಸೂಚನೆಗೆ ಕಾಲಮಿತಿ ನಿಗದಿಪಡಿಸುವುದು ಮತ್ತು ಅನುಮೋದನೆ ನೀಡುವುದು, ಮೈಸೂರು ಸರ್ಕಾರದಿಂದ ನೀಡಲಾದ ಹಕ್ಕುಪತ್ರಗಳಿಗೆ ಇ-ಸ್ವತ್ತು ದಾಖಲೆ ಸೃಜಿಸುವುದು, ಸರ್ಕಾರದ ವಿವಿಧ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಮುಳುಗಡೆ ಸಂತ್ರಸ್ತರ ಪುನರ್ವಸತಿ ಜಮೀನುಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವುದು, 1978ರ ಏ.27ರ ಪೂರ್ವದ ಮೂರು ಎಕರೆ ಅರಣ್ಯ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಅರಣ್ಯ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಜತೆಗೆ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಚಕ್ರ, ಸಾವೆಹಕ್ಲು, ಭದ್ರ, ತುಂಗಾ ಹಾಗೂ ಇನ್ನಿತರೆ ವಿದ್ಯುತ್ ಮತ್ತು ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 0.05 ಗುಂಟೆ ಒಳಗಿನ ವಿಸ್ತೀರ್ಣದ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ಮಾಡುವ ಕುರಿತು ಸಭೆಯಲ್ಲಿ ಗಮನ ಸೆಳೆಯಲಾಯಿತು.
ಈ ಎಲ್ಲ ವಿಚಾರಗಳ ಬಗ್ಗೆ ಸರ್ಕಾರವು ಅಗತ್ಯ ಕ್ರಮ ಕೈಗೊಂಡು ಜಿಲ್ಲೆಯ ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಗಮನಕ್ಕೆ ತಂದರು. ಮುಖ್ಯ ಕಾರ್ಯದರ್ಶಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ದಶಕಗಳಿಂದ ನನೆಗುದಿಗೆ ಬಿದ್ದಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯವಾಸಿಗಳ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ಆಶಾಭಾವನೆ ಮೂಡಿಸಿದರು.
ಸಭೆಯಲ್ಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಶಾರದಾ ಪೂರ್ಯಾನಾಯ್ಕ, ಎಂಎಲ್ಸಿ ಬಲ್ಕಿಷ್ ಬಾನು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ಪ್ರಮುಖರಾದ ಬಿ.ಎ.ರಮೇಶ್ ಹೆಗ್ಡೆ, ಜಯಂತ್, ಶೇಖರ್ ಸೇರಿದಂತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.
ಹಿಟ್ ಅಂಡ್ ರನ್; ಬೈಕ್ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್ಪೇಟೆಯ ಅಪೇಕ್ಷಾಗೆ ರನ್ನರ್ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…