Breaking
12 Jan 2026, Mon

ಆಗುಂಬೆ ಘಾಟ್‌ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ

ಆಗುಂಬೆ ಘಾಟ್‌ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ

ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್‌ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ.

ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ ಬೆಳಗಿನವರೆಗೆ ಸಂಚಾರ ಸುಗಮವಾಗುವ ಸಾಧ್ಯತೆ ಕಡಿಮೆ. ಕಲ್ಲುಮಣ್ಣು ಹಾಗೂ ದೊಡ್ಡ ಮರಗಳು ರಸ್ತೆಯಲ್ಲೇ ಅಡ್ಡವಾಗಿ ಬಿದ್ದಿರುವುದರಿಂದ ಕಾರ್ಯಾಚರಣೆ ವಿಳಂಬವಾಗಿದೆ.

ಆಗುಂಬೆ ಘಾಟ್ ಮಲೆನಾಡು ಹಾಗೂ ಕರಾವಳಿ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ದಾರಿಯಾಗಿದ್ದು, ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.

ಪ್ರತಿ ಮಳೆಗಾಲದಲ್ಲೂ ಆಗುಂಬೆ ಘಾಟ್‌ನಲ್ಲಿ ಧರೆ ಕುಸಿತ ಮತ್ತು ಮರ ಬಿದ್ದ ಘಟನೆಗಳು ಸಾಮಾನ್ಯವಾಗಿಬಿಟ್ಟಿದ್ದು, ಹಲವಾರು ಬಾರಿ ರಸ್ತೆ ಬ್ಲಾಕ್ ಆಗಿರುವುದರಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version