Breaking
12 Jan 2026, Mon

ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ.

ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ.

ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ತಂದಿದ್ದರು. ಅನುಮಾನಗೊಂಡ ಜೈಲು ಸಿಬ್ಬಂದಿ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ಪರಿಶೀಲಿಸಿದಾಗ, ಕಪ್ಪು ಗಮ್ ಟೇಪ್‌ನಲ್ಲಿ ಸುತ್ತಿದ ನಿಷಿದ್ಧ ವಸ್ತುಗಳು ಪತ್ತೆಯಾದವು. ತಪಾಸಣೆ ಮಾಡಿದಾಗ ಅವುಗಳಲ್ಲಿ 1 ಗಾಂಜಾ ಪ್ಯಾಕೆಟ್ ಮತ್ತು 2 ಸಿಗರೇಟ್ ಪ್ಯಾಕೆಟ್‌ಗಳು ಇರುವುದು ದೃಢಪಟ್ಟಿತು.

ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ ಜೈಲು ಸಿಬ್ಬಂದಿ ಆರೋಪಿಗಳನ್ನು ತುಂಗಾ ನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೇಂದ್ರ ಜೈಲು ಅಧೀಕ್ಷಕ ಡಾ. ರಂಗನಾಥ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಂಧಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಬಿಸ್ಕೆಟ್ ಪ್ಯಾಕೆಟ್‌ನಲ್ಲಿದ್ದ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡುವಲ್ಲಿ ಜೈಲು ಸಿಬ್ಬಂದಿ ಚಾಣಾಕ್ಷತೆ ಮೆರೆದಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್