Breaking
12 Jan 2026, Mon

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು.

ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು ಚಾಲನೆ ನೀಡಿ ಮಾತನಾಡಿದರು. “ಕನ್ನಡ ನವೆಂಬರ್ ತಿಂಗಳಿಗೆ ಸೀಮಿತವಾಗದೆ ಪ್ರತಿದಿನದ ಹೃದಯ ಭಾಷೆಯಾಗಬೇಕು. ಕರ್ನಾಟಕದ ಸಂಸ್ಕೃತಿ, ಪರಂಪರೆ ಮತ್ತು ಸಿರಿ-ಸಂಪತ್ತು ವಿಶ್ವದಾದ್ಯಂತ ಕನ್ನಡದ ಹೆಮ್ಮೆ ಹೆಚ್ಚಿಸುತ್ತಿವೆ. ಇಂತಹ ಕಾರ್ಯಕ್ರಮಗಳು ಯುವಪೀಳಿಗೆಯಲ್ಲಿ ಸಂಸ್ಕೃತಿ ಸಂರಕ್ಷಣೆಗೆ ಪ್ರೇರಣೆ ನೀಡಬೇಕು,” ಎಂದು ಅವರು ಹೇಳಿದರು.

ಕಲಾಕೌಸ್ತುಭ ಸಂಘದ ಮಾಜಿ ಅಧ್ಯಕ್ಷ ಎಂ.ಬಿ. ಮಂಜುನಾಥ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಸಂಘದ ಅಧ್ಯಕ್ಷ ಮುರುಳಿಧರ ಕೆರೆಹಳ್ಳಿ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯೋತ್ಸವ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಂಚಾಯತ್ ಸದಸ್ಯರು ಮಹಾಲಕ್ಷ್ಮಿ, ಅಶ್ವಿನಿ ರವಿಶಂಕರ್, ದೀಪಾ ಸುಧೀರ್, ವಿನೋಧ, ರವೀಂದ್ರ ಕೆರೆಹಳ್ಳಿ, ಎಂ. ಸುರೇಶಸಿಂಗ್, ತ.ಮ. ನರಸಿಂಹ, ಪದ್ಮಾ ಸುರೇಶ್, ಉಮಾ ಸುರೇಶ್, ನಿವೃತ್ತ ಯೋಧೆ ಪದ್ಮಾ ಹಾಗು ಇತರ ಗಣ್ಯರು ಭಾಗವಹಿಸಿ ಮಾತನಾಡಿದರು.

ನಾಗರತ್ನ ದೇವರಾಜ್ ಪ್ರಾರ್ಥನೆ ಸಲ್ಲಿಸಿದರು. ರವೀಂದ್ರ ಕೆರೆಹಳ್ಳಿ ಸ್ವಾಗತಿಸಿದರು ಮತ್ತು ಉಮಾ ಸುರೇಶ್ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಈ ಸಂದರ್ಭದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡ ಭುವನೇಶ್ವರಿಯ ಜಯಘೋಷಣೆ ಕೂಗಿ, ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಅದ್ಧೂರಿ ಮೆರವಣಿಗೆ ನಡೆಸುವ ಮೂಲಕ ರಾಜ್ಯೋತ್ಸವದ ಸಂಭ್ರಮ ಹೆಚ್ಚಿಸಿದರು.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version