Breaking
12 Jan 2026, Mon

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಇನ್‌ಸ್ಟಾಗ್ರಾಂ ‘ರೀಲ್ಸ್’ ಅಭಿಮಾನಿ ಸೋಗಿನಲ್ಲಿ ಶಿಕ್ಷಕನ ದರೋಡೆ – ಶಿವಮೊಗ್ಗದಲ್ಲಿ ಆಘಾತಕಾರಿ ಘಟನೆ

ಶಿವಮೊಗ್ಗ: ತಮ್ಮ ಇನ್‌ಸ್ಟಾಗ್ರಾಂ ರೀಲ್ಸ್‌ಗೆ ಅಭಿಮಾನಿ ಎಂದು ನಂಬಿಸಿ, ಶಿಕ್ಷಕರೊಬ್ಬರನ್ನು ದರೋಡೆ ಮಾಡಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿ ಈ ಕೃತ್ಯ ನಡೆದಿದೆ.

ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಇನ್‌ಸ್ಟಾಗ್ರಾಂನಲ್ಲಿ ನಿಯಮಿತವಾಗಿ ರೀಲ್ಸ್ ಅಪ್‌ಲೋಡ್ ಮಾಡುತ್ತಿದ್ದರು. ಅವರ ರೀಲ್ಸ್‌ಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬ, ಮೆಸೇಜ್ ಮೂಲಕ ಶಿಕ್ಷಕರನ್ನು ಸಂಪರ್ಕಿಸಿದ್ದ. ಬಳಿಕ ಅವರನ್ನು ಭೇಟಿಯಾಗಬೇಕೆಂದು ಕೋರಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ರೀಲ್ಸ್ಗೆ ಲೈಕ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದವನೇ, ಕೊನೆಗೆ ದರೋಡೆಗೆ ಸಂಚು ರೂಪಿಸಿರುವುದು ಈ ಪ್ರಕರಣದ ಅತ್ಯಂತ ಆಘಾತಕಾರಿ ಅಂಶವಾಗಿದೆ.

ನವೆಂಬರ್ 7ರ ರಾತ್ರಿ 9:30ರ ಸುಮಾರಿಗೆ ಶಿಕ್ಷಕರು ತಮ್ಮ ಬೈಕಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೆಟ್ರೋಲ್‌ ಬಂಕ್ ಬಳಿ ತೆರಳಿದ್ದರು. ಅಲ್ಲಿ ಓಮ್ಮಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ, ‘ನಾನೇ ನಿಮಗೆ ಮೆಸೇಜ್ ಮಾಡಿದ್ದು’ ಎಂದು ಪರಿಚಯಿಸಿಕೊಂಡಿದ್ದಾನೆ. ಕಾರಿನಿಂದ ಇಳಿದ ಮೂವರು ವ್ಯಕ್ತಿಗಳು ತಕ್ಷಣ ಶಿಕ್ಷಕರನ್ನು ಸುತ್ತುವರಿದು, ಚಾಕು ತೋರಿಸಿ ಬೆದರಿಸಿದ್ದಾರೆ.

ದರೋಡೆಕೋರರು ಶಿಕ್ಷಕರ ಕೈಯಲ್ಲಿದ್ದ ಉಂಗುರಗಳು, ಕೊರಳಲ್ಲಿದ್ದ ಚಿನ್ನದ ಸರ, ಕಿವಿಯೋಲೆ ಹಾಗೂ ಮೊಬೈಲ್‌ ಫೋನ್ ಅನ್ನು ಬಲವಂತವಾಗಿ ಕಸಿದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಶಿಕ್ಷಕರ ಮೊಬೈಲ್ ಫೋನ್ ಪೇ ಅಪ್ಲಿಕೇಶನ್ ಮೂಲಕ 3,500 ರೂಪಾಯಿ ನಗದನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತೀವ್ರ ತನಿಖೆ ನಡೆಸುತ್ತಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version