Headlines

ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು

A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager.

ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್‌ಆರ್‌ಟಿಸಿ ಬಸ್ ಚಾಲಕ ನೇಣಿಗೆ ಶರಣು

ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಡಿಪೋ ಮ್ಯಾನೇಜರ್ ಡ್ಯೂಟಿ ನೀಡದೇ ನಿರಂತರವಾಗಿ ಕಿರುಕುಳ ನೀಡಿದ್ದರು ಎಂಬ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ನಾಗಪ್ಪ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದಲ್ಲಿ ವಾಸವಾಗಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರಿಗೆ ಡ್ಯೂಟಿ ನೀಡಲಾಗುತ್ತಿರಲಿಲ್ಲ ಎನ್ನಲಾಗಿದ್ದು, ಮೂರ್ನಾಲ್ಕು ಬಾರಿ ಡ್ಯೂಟಿ ಸಿಗದೆ ಮನೆಗೆ ವಾಪಸ್ ಆಗಿದ್ದಾರಂತೆ. ಈ ಕಾರಣದಿಂದ ಅವರು ತೀವ್ರ ಮನನೊಂದಿದ್ದು, ಕಳೆದ ಸೋಮವಾರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಾಲ್ಕು ದಿನಗಳ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಇದೇ ವೇಳೆ ಕೆಎಸ್‌ಆರ್‌ಟಿಸಿ ನೌಕರರು ಮೃತ ಚಾಲಕ ನಾಗಪ್ಪ ಅವರ ಅಂತಿಮ ದರ್ಶನ ಪಡೆದುಕೊಂಡರು. ಬಳಿಕ ಮೃತದೇಹವನ್ನು ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಅಂತ್ಯಕ್ರಿಯೆಗಾಗಿ ಕರೆದೊಯ್ಯಲಾಯಿತು. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Exit mobile version