ದೇವಿ ದರ್ಶನ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ | ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಆತಂಕ
Former Karnataka Minister Kagodu Thimmappa fell ill while having darshan of the goddess during the Marikamba Jatre in Sagara. He was rushed to hospital and later discharged.
ಸಾಗರ : ಇಂದಿನಿಂದ ಆರಂಭಗೊಂಡಿರುವ ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ದೇವಿಯ ದರ್ಶನ ಪಡೆಯುವ ವೇಳೆ ದಿಢೀರ ಅಸ್ವಸ್ಥರಾದ ಘಟನೆ ನಡೆದಿದೆ.
ಜಾತ್ರೆಯ ಮೊದಲ ದಿನ ತಾಯಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ಕಾಗೋಡು ತಿಮ್ಮಪ್ಪ ಅವರು ದರ್ಶನ ಮಾಡುತ್ತಿದ್ದ ಸಂದರ್ಭದಲ್ಲೇ ತೀವ್ರ ಸುಸ್ತು ಹಾಗೂ ಅಸ್ವಸ್ಥತೆಯನ್ನು ಅನುಭವಿಸಿದ್ದಾರೆ. ತಕ್ಷಣವೇ ಅಲ್ಲಿದ್ದ ಕಾರ್ಯಕರ್ತರು ಹಾಗೂ ಸ್ಥಳೀಯರು ಅವರನ್ನು ಆಂಬುಲೆನ್ಸ್ ಮೂಲಕ ಸಾಗರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು.
ಉಸಿರಾಟದ ತೊಂದರೆ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಅವರು ಅಚಾನಕ್ ಕುಸಿದು ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
ತಕ್ಷಣವೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ಡಾ. ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವೈದ್ಯರ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಮನೆಗೆ ಕರೆತರಲಾಗಿದೆ. ಕಾಗೋಡು ತಿಮ್ಮಪ್ಪ ಅವರು ಚೇತರಿಸಿಕೊಂಡಿರುವುದಾಗಿ ಅವರ ಪುತ್ರಿ ಮಾಹಿತಿ ನೀಡಿದ್ದಾರೆ.
ಹಿರಿಯ ಮುತ್ಸದಿಗಳಾದ ಕಾಗೋಡು ತಿಮ್ಮಪ್ಪ ಅವರಿಗೆ ಈ ಹಿಂದೆ ಕೂಡ ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಭಾಷಣದ ಸಂದರ್ಭದಲ್ಲೂ ಹಾಗೂ ಶಿವಮೊಗ್ಗದ ಪ್ರತಿಭಟನೆ ವೇಳೆ ಕೂಡ ಕುಸಿದು ಬಿದ್ದ ಘಟನೆಗಳು ವರದಿಯಾಗಿದ್ದವು.
