A 74-year-old man, M. Bhadrachar from Nevaturu, died after being hit by a train near Ripponpet on Saturday afternoon. Police visited the spot and further investigation is underway.
ರಿಪ್ಪನ್ಪೇಟೆ: ಸಮೀಪದ ನೆವಟೂರು ಗ್ರಾಮದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ನೆವಟೂರು ನಿವಾಸಿ ಎಂ. ಭದ್ರಾಚಾರ್ (74) ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನ ಸುಮಾರು 3.30 ಗಂಟೆಯ ವೇಳೆಗೆ ರೈಲು ಹಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಯಿಂದಾಗಿ ಮೃತ ವ್ಯಕ್ತಿಯ ಕಾಲು ಭಾಗ ತುಂಡಾಗಿದ್ದು, ತಲೆಯ ಭಾಗ ಗಂಭೀರವಾಗಿ ಛಿದ್ರಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕುಟುಂಬಸ್ಥರ ಮಾಹಿತಿ ಪ್ರಕಾರ, ಕಳೆದ ಕೆಲವು ವರ್ಷಗಳಿಂದ ಭದ್ರಾಚಾರ್ ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಜೊತೆಗೆ ಅವರಿಗೆ ಕಿವಿ ಸರಿಯಾಗಿ ಕೇಳಿಸದ ಸಮಸ್ಯೆಯೂ ಇದ್ದಿತು ಎನ್ನಲಾಗಿದೆ. ಇದೇ ಕಾರಣದಿಂದ ಅವರು ರೈಲು ಬರುತ್ತಿರುವುದನ್ನು ಗಮನಿಸದೇ ಹಳಿಯ ಮೇಲೆ ನಡೆದಿರಬಹುದೆಂದು ಶಂಕಿಸಲಾಗಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪ್ರಕರಣದ ಕುರಿತು ಮಾಹಿತಿ ಪಡೆದ ರೈಲ್ವೆ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಭದ್ರಾಚಾರ್ ಅವರು ತಮ್ಮ ಸೇವಾ ಅವಧಿಯಲ್ಲಿ ರಿಸರ್ವ್ ಪೊಲೀಸ್ ಇಲಾಖೆಯಲ್ಲಿ ಹಾಗೂ ವಿಲೇಜ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸಿದ್ದರು. ಸೇವೆಗೆ ರಾಜೀನಾಮೆ ನೀಡಿದ ಬಳಿಕ ತಮ್ಮ ಮನೆಯ ಸಮೀಪ ಕುಲುಮೆ (ಕಬ್ಬಿಣ ಕೆಲಸ) ನಡೆಸುತ್ತಾ ಜೀವನ ಸಾಗಿಸುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ದುರ್ಘಟನೆ ಗ್ರಾಮದಲ್ಲಿ ವಿಷಾದದ ವಾತಾವರಣ ನಿರ್ಮಿಸಿದ್ದು, ಮೃತರ ಕುಟುಂಬಸ್ಥರು ಮತ್ತು ಬಂಧುಬಳಗದಲ್ಲಿ ದುಃಖ ಮನೆ ಮಾಡಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.