Tension erupted in Shikaripura of Shivamogga district over Ramadan donation collection, leading to a clash between two groups. Police intervened and arrested 10 people in connection with the incident
ಶಿವಮೊಗ್ಗ: ಶಿಕಾರಿಪುರ ಪಟ್ಟಣದ ಗಗ್ರಿ ಪ್ರದೇಶದಲ್ಲಿ ರಂಜಾನ್ ಹಬ್ಬದ ದೇಣಿಗೆ ಸಂಗ್ರಹ ವಿಚಾರವಾಗಿ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿದ್ದು, ಘಟನೆ ಸಂಬಂಧ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ನಡೆದ ಈ ಘಟನೆ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು.
ಮುಂಬರುವ ರಂಜಾನ್ ಹಬ್ಬದ ಆಚರಣೆಗೆ ಸಂಬಂಧಿಸಿ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಕುಟುಂಬದಿಂದ ಕಡ್ಡಾಯವಾಗಿ 1,000 ರೂ. ದೇಣಿಗೆ ಸಂಗ್ರಹಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ನಿರ್ಧಾರಕ್ಕೆ ಮತ್ತೊಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿದೆ. ದೇಣಿಗೆ ಮೊತ್ತದ ವಿಚಾರವಾಗಿ ಆರಂಭವಾದ ವಾಗ್ವಾದ ಕ್ರಮೇಣ ಉಗ್ರ ಸ್ವರೂಪ ಪಡೆದುಕೊಂಡಿತು.
ವಿವಾದ ವಿಕೋಪಕ್ಕೆ ತಿರುಗಿದಂತೆ ಎರಡೂ ಗುಂಪುಗಳ ಸದಸ್ಯರು ಪರಸ್ಪರ ಕಲ್ಲು ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಲು ಮುಂದಾದರು. ಮುಖ್ಯ ರಸ್ತೆಯಲ್ಲೇ ಕಲ್ಲು ತೂರಾಟ ನಡೆದ ಪರಿಣಾಮ ಶಿಕಾರಿಪುರ–ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಭಯಭೀತರಾಗಿದ್ದು, ವ್ಯಾಪಾರಸ್ಥರು ಅಂಗಡಿ ಮುಚ್ಚಿ ಆತಂಕ ವ್ಯಕ್ತಪಡಿಸಿದರು.
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಶಿಕಾರಿಪುರ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಗುಂಪುಗಳನ್ನು ಚದುರಿಸಿ, ಪರಿಸ್ಥಿತಿ ಉದ್ವಿಗ್ನವಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಯಿತು.
ಈ ಗಲಭೆಗೆ ಸಂಬಂಧಿಸಿ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದ ಆರೋಪದ ಮೇಲೆ 10 ಮಂದಿಯನ್ನು ಬಂಧಿಸಲಾಗಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.




