Headlines

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station.

ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ ಬಡ ರೈತರಾದ ಷಣ್ಮುಖಪ್ಪ ಬಿನ್ ಕೃಷ್ಣಪೂಜಾರಿ ಅವರಿಗೆ ಸೇರಿದ ಜಾಗದಲ್ಲಿ ಈ ಅವಘಡ ಸಂಭವಿಸಿದೆ.  ಸುಮಾರು 2 ಎಕರೆ ಪ್ರದೇಶದಲ್ಲಿ ಕಬ್ಬು ಚೆನ್ನಾಗಿ ಬೆಳೆಯಲಾಗಿತ್ತು. ಆದರೆ ದುರದೃಷ್ಟವಶಾತ್, ಸುಮಾರು 1.5 ಎಕರೆ ಪ್ರದೇಶದ ಕಬ್ಬು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟುಹೋಗಿದೆ.

ಬೆಂಕಿಯಿಂದಾಗಿ ಕಬ್ಬು ಹಾಗೂ ಬೀಜದ ಕಬ್ಬು ನಾಶವಾಗಿರುವುದು ರೈತನಿಗೆ ಹೆಚ್ಚಿನ ನಷ್ಟವನ್ನುಂಟು ಮಾಡಿದೆ. ಪ್ರಾಥಮಿಕ ಅಂದಾಜು ಪ್ರಕಾರ ಸುಮಾರು 4 ರಿಂದ 5 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಶನಿವಾರ ಮಧ್ಯಾಹ್ನ ಸುಮಾರು 1.30 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಹಾಗೂ ರೈತರು ಸೇರಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದರು. ಆದರೂ ಬೆಂಕಿ ವೇಗವಾಗಿ ವ್ಯಾಪಿಸಿದ್ದರಿಂದ ಹೆಚ್ಚಿನ ಪ್ರಮಾಣದ ಬೆಳೆ ಹಾನಿಯಾಗಿದೆ.

ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ತಗುಲಿದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

About The Author

Exit mobile version