Headlines

ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

ಸರ್ಕಾರಿ ಆಸ್ಪತ್ರೆ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ದಿಡೀರ್ ಭೇಟಿ – ಪರಿಶೀಲನೆ

District Commissioner conducted a surprise inspection at Ripponpet Primary Health Centre and Ambedkar Pre-Matric Boys Hostel, reviewing facilities, medicine stock, and interacting with students about their future aspirations.

ರಿಪ್ಪನ್ ಪೇಟೆ: ತಾಲೂಕಿನ ರಿಪ್ಪನ್ ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ದಿಡೀರ್ ಭೇಟಿ ನೀಡಿ ವಿವಿಧ ವ್ಯವಸ್ಥೆಗಳ  ಬಗ್ಗೆ ಪರಿಶೀಲನೆ ನಡೆಸಿದರು.

ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಮೂಲಸೌಕರ್ಯ, ಔಷಧಗಳ ಲಭ್ಯತೆ, ವೈದ್ಯಕೀಯ ಸೇವೆಗಳ ಗುಣಮಟ್ಟ ಹಾಗೂ ರೋಗಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಪರಿಶೀಲನೆ ನಡೆಸಿದರು. ವೈದ್ಯರು ಹಾಗೂ ಸಿಬ್ಬಂದಿಯಿಂದ ಮಾಹಿತಿ ಪಡೆದು, ಅಗತ್ಯವಿರುವ ಔಷಧಿಗಳು ಸದಾ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ರೋಗಿಗಳಿಗೆ ಸಮಯೋಚಿತ ಮತ್ತು ಗುಣಮಟ್ಟದ ಚಿಕಿತ್ಸೆ ಒದಗಿಸುವಲ್ಲಿ ಯಾವುದೇ ನಿರ್ಲಕ್ಷ್ಯವಿರಬಾರದು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.

ನಂತರ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದರು. ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ದಿನನಿತ್ಯದ ಸೌಲಭ್ಯಗಳ ಬಗ್ಗೆ ವಿಚಾರಿಸಿ, ಅವರಿಗೆ ಯಾವುದೇ ತೊಂದರೆಗಳಿವೆಯೇ ಎಂಬುದನ್ನು ಕೇಳಿ ತಿಳಿದುಕೊಂಡರು. ಈ ವೇಳೆ ಮಕ್ಕಳ ಭವಿಷ್ಯದ ಆಶಯಗಳನ್ನು ಕೇಳಿದಾಗ, ಒಬ್ಬ ವಿದ್ಯಾರ್ಥಿ “ನಿಮ್ಮಂತೆಯೇ ಐಎಎಸ್ ಅಧಿಕಾರಿಯಾಗಬೇಕು” ಎಂದು ಹೇಳಿದರೆ, ಮತ್ತೊಬ್ಬ “ಎಲೆಕ್ಟ್ರಾನಿಕ್ ಇಂಜಿನಿಯರ್ ಆಗುತ್ತೇನೆ” ಎಂದನು. ಇನ್ನೊಬ್ಬ ವಿದ್ಯಾರ್ಥಿ “ಪೊಲೀಸ್ ಆಗಬೇಕು” ಎಂದು ಆತ್ಮವಿಶ್ವಾಸದಿಂದ ಹೇಳಿದಾಗ, ಮಕ್ಕಳ ಕಣ್ಣುಗಳಲ್ಲಿ ಹೊಳೆದ ಕನಸು ಮತ್ತು ಉತ್ಸಾಹ ಜಿಲ್ಲಾಧಿಕಾರಿಗಳ ಗಮನ ಸೆಳೆಯಿತು.

ವಿದ್ಯಾರ್ಥಿ ನಿಲಯದ ಭೋಜನಾಲಯ, ಅಡುಗೆಮನೆ ಹಾಗೂ ಸ್ಟಾಕ್ ರೂಮ್‌ಗಳನ್ನು ಕೂಡ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಲು ಸೂಚಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಕೊರತೆ ಉಂಟಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ವಾರ್ಡನ್‌ಗಳ ಮೇಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಭರತ್ ರಾಜ್, ಶಿರಸ್ತೇದಾರ್ ಸುಧೀರ್ ಕುಮಾರ್, ರಾಜಸ್ವ ನಿರೀಕ್ಷಕ ಸೈಯದ್ ಅಪ್ರೋಜ್, ವಿಎ ಮಂಜುನಾಥ್, ಪ್ರವೀಣ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Exit mobile version