
ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ
NSUI stages a massive protest at Kuvempu University in Shivamogga over alleged anti-student policies, delays in results, and mark sheets, leading to vandalism at the Vice-Chancellor’s office.
ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೆಳಗ್ಗೆ ತೀವ್ರ ಪ್ರತಿಭಟನೆ ನಡೆಸಿದರು. ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು.
ಪ್ರತಿಭಟನಾಕಾರರು ಕುಲಪತಿ ಶರತ್ ಅನಂತಮೂರ್ತಿ ಅವರ ಕಚೇರಿಗೆ ಮುತ್ತಿಗೆ ಹಾಕಿ, ನಾಮಫಲಕಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಚೇರಿಯ ಪೀಠೋಪಕರಣಗಳು ಹಾಗೂ ಇತರ ಸಾಮಗ್ರಿಗಳನ್ನು ಧ್ವಂಸಗೊಳಿಸಿರುವುದು ಗಮನಾರ್ಹವಾಗಿದೆ.
ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ವಿರೋಧಿ ಧೋರಣೆ ಹೆಚ್ಚುತ್ತಿರುವುದಾಗಿ ಆರೋಪಿಸಿದ ಎನ್.ಎಸ್.ಯು.ಐ ಜಿಲ್ಲಾ ಘಟಕ, ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಕಳೆದ ಐದು ತಿಂಗಳಿಂದ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗದೇ ಇರುವುದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಲ್ಲದೆ, ಕಳೆದ ಮೂರು ವರ್ಷಗಳಿಂದ ಪದವಿ ಅಂಕಪಟ್ಟಿಗಳನ್ನು ವಿತರಿಸದಿರುವುದು ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿಸಿದೆ. ಅಂಕಪಟ್ಟಿಗಳಿಲ್ಲದೆ ಉನ್ನತ ಶಿಕ್ಷಣ ಮತ್ತು ಉದ್ಯೋಗ ಅವಕಾಶಗಳು ಕೈ ತಪ್ಪುತ್ತಿರುವುದಾಗಿ ಪ್ರತಿಭಟನಾಕಾರರು ಆರೋಪಿಸಿದರು.
ಇನ್ನೂ, ಪರೀಕ್ಷಾ ಶುಲ್ಕ ಮತ್ತು ಪ್ರವೇಶ ಶುಲ್ಕವನ್ನು ಏಕಾಏಕಿ ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಭಾರವಾಗಿದೆ. ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ದೋಷಗಳಿಂದ ಫಲಿತಾಂಶಗಳಲ್ಲಿ ಗೊಂದಲ ಉಂಟಾಗಿದ್ದು, ಪಾಸ್ ಆದವರನ್ನು ಫೇಲ್ ಎಂದು ತೋರಿಸುವ ಪ್ರಕರಣಗಳು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿವೆ.
ಈ ಎಲ್ಲಾ ಅವ್ಯವಸ್ಥೆಗಳ ಹಿನ್ನೆಲೆ ಕುಲಪತಿಗಳನ್ನು ತಕ್ಷಣ ವಜಾಗೊಳಿಸಬೇಕೆಂದು ಎನ್.ಎಸ್.ಯು.ಐ ಆಗ್ರಹಿಸಿದೆ.




